Four lane Road: ಹಲವು ಜಿಲ್ಲೆಗಳಲ್ಲಿ ಪ್ರಮುಖ ರಸ್ತೆಗಳ ಕಾಮಗಾರಿ ಪ್ರಗತಿಯಲ್ಲಿವೆ. ಹಾಗೆಯೇ ಇದೀಗ ಹನೂರು-ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ನಡುವೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇದಕ್ಕೆ ತಗಲುವ ವೆಚ್ಚ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಭಕ್ತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಹನೂರು-ಮಹದೇಶ್ವರ ಬೆಟ್ಟದವರೆಗೆ ಚತುಷ್ಟಥ ರಸ್ತೆ ನಿರ್ಮಾಣ ಮಾಡಲು ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ತಾಲೂಕಿನ ಎಲ್ಲೇಮಾಳ ಗ್ರಾಮದಲ್ಲಿ 15 ಕೋಟಿ ರೂಪಾಯಿ ವೆಚ್ಚದಲ್ಲಿರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಲೆ ಮಹದೇಶ್ವರ ಬೆಟ್ಟಕ್ಕೆ ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಲಿದ್ದಾರೆ. ಇನ್ನು ಈ ಮಾರ್ಗದಲ್ಲಿ ಜಾತ್ರಾ ಮಹೋತ್ಸವ ಹಾಗೂ ಹಬ್ಬಗಳ ಸಂದರ್ಭಗಳಲ್ಲು ಅಪಘಾತಗಳು ನಡೆಯುತ್ತಲೇ ಇವೆ. ಇದನ್ನು ತಡೆಯುವ ಸಲುವಾಗಿ ಹನೂರು-ಮಲೆ ಮಹದೇಶ್ವರ ಬೆಟ್ಟದ ನಡುವೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಭಕ್ತಾದಿಗಳಿಗೆ ತುಂಬಾ ಅನುಕೂಲ ಆಗಲಿದೆ ಎಂದು ಹೇಳಿದರು.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ-ಹನೂರು ಪಟ್ಟಣದವರೆಗೆ 108 ಕೋಟಿ ರೂಪಾಯಿ ವೆಚ್ಚದಲ್ಲಿ ಮೊದಲ ಹಂತದ ರಸ್ತೆ ಅಭಿವೃದ್ಧಿ ಮಾಡಲಾಗಿದೆ. 2ನೇ ಹಂತದಲ್ಲಿ ಹನೂರು ಪಟ್ಟಣದಿಂದ ಪಾಲಾರ್ವರೆಗೆ ರಸ್ತೆ ಅಭಿವೃದ್ಧಿ ಮಾಡಲು ಈಗಾಗಲೇ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ. ಅನುಮೋದನೆ ಸಿಕ್ಕ ಬಳಿಕವೇ ತರ ಕಾಮಗಾರಿ ಪ್ರಾರಂಭ ಆಗಲಿದೆ ಎಂದು ಹೇಳಿದರು.