ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಶುಕ್ರವಾರ ನಗರಕ್ಕೆ ಆಗಮಿಸಿದ್ದು, ತನಿಖೆಯನ್ನು ಆರಂಭಿಸಿದೆ.
ಬೆಂಗಳೂರಿನಿಂದ ಬೀದರ್ಗೆ ಆಗಮಿಸಿದ ಡಿವೈಎಸ್ಪಿ ಸುಲೇಮಾನ್ ತಹಶೀಲ್ದಾರ್ ಅವರ ನೇತೃತ್ವದ ತನಿಖಾ ತಂಡ, ನಗರದ ಎಸ್ಪಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟೆ ಹಾಗೂ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಪೂಜಾರಿ ಅವರು ಸಿಐಡಿ ಅಧಿಕಾರಿಗಳಿಗೆ ಮಾಹಿತಿ ಒದಗಿಸಿದರು.
ಎಸ್ಪಿ ಪ್ರದೀಪ್ ಅವರಿಂದ ಕೇಸ್ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಿಐಡಿ ಅಧಿಕಾರಿಗಳ ತಂಡ, ನೇರವಾಗಿ ರೈಲ್ವೆ ಪೊಲೀಸ್ ಠಾಣೆಗೆ ಆಗಮಿಸಿ ಅಲ್ಲಿಯ ಸಿಪಿಐ ಅವರನ್ನು ತಮ್ಮ ಜೊತೆಗೆ ಕರೆದುಕೊಂಡು ಬಂದು ಸಚಿನ್ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದರು. ನಂತರ ರೈಲ್ವೆ ಪೊಲೀಸ್ ಠಾಣೆಗೆ ಆಗಮಿಸಿದ ಸಿಐಡಿ ತಂಡ, ಸುದೀರ್ಘ ಎರಡು ಗಂಟೆಗಳ ಕಾಲ ರೈಲ್ವೆ ಪೊಲೀಸರಿಂದಲೂ ಮಾಹಿತಿ ಕಲೆಹಾಕಿತು.
ರೈಲ್ವೆ ಠಾಣೆಯಿಂದ ಮಾಹಿತಿ ಪಡೆದು ಬಳಿಕ ನೇರವಾಗಿ ಭಾಲ್ಕಿ ತಾಲೂಕಿನ ಕಟ್ಟಿ ತೂಗಾಂವ್ ಗ್ರಾಮದ ಮೃತ ಸಚಿನ್ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳು ಅಲ್ಲಿಯೂ ಸುದೀರ್ಘ ಎರಡು ಗಂಟೆಗೂ ಹೆಚ್ಚು ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ ಮಾಡಿದರು. ಸಚಿನ್ ಡೆತ್ನೋಟ್ ಬರೆದಿಟ್ಟು ಡಿ. 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.
”ಗುತ್ತಿಗೆದಾರ ಸಚಿನ್ ಪಾಂಚಾಳ ಅವರು ಆತ್ಮಹತ್ಯೆ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದೆ. ಅವರು ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ ಕಿರುಕುಳದ ಉಲ್ಲೇಖವಿದೆ. ಜಾಲತಾಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪೋಸ್ಟ್ ಹಾಕಿಕೊಂಡಿದ್ದಾಗ ಅವರ ಇಬ್ಬರು ಸಹೋದರಿಯರು ಅಂದು ಮಧ್ಯಾಹ್ನವೇ 2.15ಕ್ಕೆ ಪೊಲೀಸ್ ಠಾಣೆಗೆ ಧಾವಿಸಿದ್ದರು. ಗೋಗರೆದು ಕೇಳಿದರೂ ಅವರ ಮನವಿಯನ್ನು ಕಿಂಚಿತ್ತೂ ಲೆಕ್ಕಿಸದೇ, ಅಮಾನವೀಯವಾಗಿ ಪಿಎಸ್ಐ ನಡೆದುಕೊಂಡಿದ್ದಾರೆ. ಸಚಿನ್ ಹುಡುಕುವ ಕೆಲಸವನ್ನೂ ಮಾಡಿಲ್ಲ. ಪೊಲೀಸ್ ಅಧಿಕಾರಿಗಳ ವರ್ತನೆ ಖಂಡನೀಯ. ಕಾಂಗ್ರೆಸ್ ಹಿರಿಯ ಮುಖಂಡ, ಖರ್ಗೆ ಕುಟುಂಬಕ್ಕೆ ಹತ್ತಿರ ಇರುವ ರಾಜು ಕಪನೂರ್ ಈ ಪ್ರಕರಣದ ಹಿಂದಿನ ಪ್ರಮುಖ ಆರೋಪಿ ಎಂಬುದು ಡೆತ್ ನೋಟಿನಲ್ಲಿದೆ. ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಬರೆದಿಟ್ಟ ಡೆತ್ ನೋಟಿನ ಮಾಹಿತಿ ಸತ್ಯಕ್ಕೆ ದೂರವಾಗುವ ಸಾಧ್ಯತೆ ಇಲ್ಲ. ಹಾಗಾಗಿ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆಗೆ ವಹಿಸಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ರಾಜ್ಯ ಸರ್ಕಾರ ಮಾತ್ರ ಇವರ ಆರೋಪವನ್ನು ತಳ್ಳಿಹಾಕಿದೆ.
‘ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ” ಎಂದು ಸಿಎಂ ಸಿದ್ದರಾಮಯ್ಯ ಸೇರಿ ಸಂಪುಟ ಸಚಿವರು ಖರ್ಗೆ ಬೆನ್ನಿಗೆ ನಿಂತಿದ್ದಾರೆ.