ಬೆಂಗಳೂರು || ವಿಧಾನಸೌಧದ ಆವರಣದಲ್ಲಿಂದು ಭುವನೇಶ್ವರಿಯ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು || ವಿಧಾನಸೌಧದ ಆವರಣದಲ್ಲಿಂದು ಭುವನೇಶ್ವರಿಯ ಕಂಚಿನ ಪ್ರತಿಮೆ ಅನಾವರಣ

ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಶಕ್ತಿಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ ನೆಲಮಟ್ಟದಿಂದ 43 ಅಡಿ 6 ಇಂಚಿನ ನಾಡದೇವತೆ ಭುವನೇಶ್ವರಿಯ ಕಂಚಿನ ಪ್ರತಿಮೆ ಇಂದು ಅನಾವರಣಗೊಳ್ಳಲಿದೆ.

ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ ಕನ್ನಡ’ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಸರ್ಕಾರ ಆಯೋಜನೆ ಮಾಡಲಾಗಿತ್ತು. ಅದರಂತೆ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಲಿದ್ದಾರೆ.

ಹೊಯ್ಸಳ ಶೈಲಿಯ ಪೀಠ ನಿರ್ಮಾಣ : ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ. ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನೀಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆ ನಿರ್ಮಿಸಲಾಗಿದೆ. ಹೊಯ್ಸಳ ಲಾಂಛನ, ವೈಜಯಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ.

ಪ್ರತಿಮೆಯ ಸುತ್ತಲೂ ಉದ್ಯಾನವನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆಂದೇ ಪಶ್ಚಿಮಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ಸಾರಿಗೆ ಬಸ್ನಲ್ಲಿ ಹಾರಾಡಲಿದೆ ಕನ್ನಡದ ಧ್ವಜ : ಸ್ಥಳೀಯ ಬಿಬಿಎಂಪಿಯನ್ನು ಮೆರವಣಿಗೆಗೆ ಬಳಸಿಕೊಳ್ಳಲಾಗಿದ್ದು, ಇಂದು ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಕನ್ನಡದ ಧ್ವಜ ಹಾರಾಡಲಿದೆ. ಉಚಿತವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡದ ಧ್ವಜವನ್ನು ವಿತರಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಪ್ರತಿಮೆ ಅನಾವರಣದ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ 4 ದಿಕ್ಕುಗಳಿಂದ ಮೆರವಣಿಗೆ ಆಗಮಿಸಲಿದ್ದು, ಜ್ಞಾನಪೀಠ ಪುರಸ್ಕೃತರು ಹಾಗೂ ನಾಡಿನ ಹೆಸರಾಂತ ಮಹನೀಯರ ಫೋಟೋಗಳುಳ್ಳ ಪಲ್ಲಕ್ಕಿ ಮೆರವಣಿಗೆಯಲ್ಲಿ ಬರಲಿವೆ.

ಪಂಪ, ರನ್ನ, ಪೊನ್ನ, ಜನ್ನ, ಸರ್.ಎಂ.ವಿಶ್ವೇಶ್ವರಯ್ಯ, ಸರ್ ಸಿ.ವಿ.ರಾಮನ್, ಸಿ.ಎನ್.ಆರ್.ರಾವ್, ಭೀಮ್ಸೇನ್ ಜೋಶಿ, ಡಾ.ರಾಜ್ಕುಮಾರ್, ಎಸ್.ನಿಜಲಿಂಗಪ್ಪ, ಶಿವಕುಮಾರ ಸ್ವಾಮೀಜಿ, ದೇ.ಜವರೇಗೌಡ, ಡಾ. ವಿರೇಂದ್ರ ಹೆಗಡೆ, ಡಾ. ಪುನೀತ್ ರಾಜ್ಕುಮಾರ್ ಅವರ ಫೋಟೋವಿರುವ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿವೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕತರು ಹಾಗೂ ರಾಷ್ಟ್ರಕವಿಗಳಾದ ಕುವೆಂಪು, ದ.ರಾ.ಬೇಂದ್ರೆ, ಶಿವರಾಮಕಾರಂತ, ಮಾಸ್ತಿ ವೆಂಕಟೇಶ ಅಯ್ಯಾಂಗಾರ್, ವಿ.ಕೃ. ಗೋಕಾಕ್, ಡಾ. ಯು. ಆರ್. ಅನಂತ ಮೂರ್ತಿ, ಡಾ. ಗಿರೀಶ್ ಕಾರ್ನಾಡ್, ಡಾ. ಚಂದ್ರಶೇಖರ ಕಂಬಾರ, ಮಂಜೇಶ್ವರ ಗೋವಿಂದ ಪೈ, ಡಾ. ಜಿ.ಎಸ್. ಶಿವರುದ್ರಪ್ಪ ಅವರ ಫೋಟೋ ಮೆರವಣಿಗೆಯಲ್ಲಿ ಬರಲಿವೆ.

ಉತ್ತರ ದಿಕ್ಕು (ಹೆಬ್ಬಾಳ) : ಈ ದಿಕ್ಕಿನಿಂದ ಕದಂಬರು, ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರ ಅರಸರು, ಗಂಗರು, ಮೈಸೂರು ರಾಜ್ಯರ ಲಾಂಛನ ಹಾಗೂ ಹಲ್ಮಿಡಿ ಶಾಸನದ ಪ್ರತಿರೂಪ ಬರಲಿದೆ.

ದಕ್ಷಿಣ ದಿಕ್ಕು (ಬಸವನಗುಡಿ ಬುಲ್ ಟೆಂಪಲ್): ಇನ್ನು ದಕ್ಷಿಣ ದಿಕ್ಕಿನಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ, ಕನಕದಾಸರು, ಪುರಂದರದಾಸರು, ಸಂಚಿ ಹೊನ್ನಮ್ಮ, ದಾನ ಚಿಂತಾಮಣಿ ಅತ್ತಿಮಬ್ಬೆ, ಅಕ್ಕಮಹಾದೇವಿ, ಕುಮಾರವ್ಯಾಸ, ಸಂತ ಶಿಶುನಾಳ ಷರೀಫ, ರೆವರೆಂಡ್ ಎಫ್ ಕಿಟ್ಟೆಲ್, ಬಿ.ಎಲ್. ರೈಸ್ ಅವರ ಪಲ್ಲಕ್ಕಿ ಬರಲಿದ್ದು, ನಾಲ್ಕು ದಿಕ್ಕುಗಳಿನಿಂದ ಮೆರವಣಿಗೆ ಸಾಗಿ ಅಂತಿಮವಾಗಿ ನಾಡದೇವಿ ಭುವನೇಶ್ವರಿ ಪ್ರತಿಮೆ ಇರುವ ವಿಧಾನಸೌಧದ ಬಳಿ ತಲುಪಲಿವೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರತಿಯೊಂದು ದಿಕ್ಕಿನಲ್ಲಿ ಶಾಸಕರು ಮೆರವಣಿಗೆ ಚಾಲನೆ ನೀಡಲಾಗಿದ್ದು, ಹತ್ತಾರು ಕಲಾ ತಂಡಗಳು ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ನಾಡದೇವಿ ಭುವನೇಶ್ವರಿ ಪ್ರತಿಮೆ ಅನಾವರಣದ ಬಳಿಕ ಕನ್ನಡ ಗೀತೆಗಳ ಕಾರ್ಯಕ್ರಮ ಮತ್ತು ಹೊನ್ನ ಬಿತ್ತೇವು – ನೃತ್ಯ ರೂಪಕ ಕಾರ್ಯಕ್ರಮ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Leave a Reply

Your email address will not be published. Required fields are marked *