ಬೆಂಗಳೂರು: ಕರ್ನಾಟಕ ಬಿಜೆಪಿ ಬಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಬಣ ರಾಜಕೀಯ ಮಧ್ಯೆ ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು ಎಂದು ವರಿಷ್ಠರು ತಿಳಿಸಿದ್ದಾರೆ. ಹಾಗಾದರೆ ಈ ಹುದ್ದೆಗಾಗಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಅರ್ಜಿ ಹಾಕಿದ್ದಾರೆಯೇ?. ಅವರು ಪ್ರಬಲ ಆಕಾಂಕ್ಷಿಯೇ ಎಂಬುದಕ್ಕೆ ಸ್ವತಃ ಅವರ ಉತ್ತರ ನೀಡಿದ್ದಾರೆ. ಕೆಲವರ ಆರೋಪ, ಈ ಬಗೆಗಿನ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್ ಅವರು, ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ. ಇದರ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಸ್ಪಷ್ಟಪಡಿಸಿದರು.
ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹಿರಿಯರು ನೀಡಿದ ವಿರೋಧ ಪಕ್ಷದ ನಾಯಕತ್ವದ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸುತ್ತಿದ್ದೇನೆ. ನಾನೇನೂ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಇದಕ್ಕಾಗಿ ನಾನಂತೂ ಅರ್ಜಿ ಹಾಕಿಲ್ಲ. ಆ ಬಗ್ಗೆ ಯೋಚಿಸಿಯೇ ಇಲ್ಲ. ಆದರೆ ಈ ರೀತಿ ಸಮಸ್ಯೆಯಾಗಿರುವುದು ನನಗೂ ನೋವು ತಂದಿದೆ. ಎಲ್ಲರೂ ಹೊಂದಾಣಿಕೆ ಮಾಡಿಕೊಂಡು ಮುಂದುವರಿಯಬೇಕಾಗಿತ್ತು ಎಂದು ಹೇಳಿದರು. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. ಕರ್ನಾಟಕದಲ್ಲಿ ಒಂದೇ ಕಡೆ ಬದಲಾವಣೆಯಾಗುತ್ತಿಲ್ಲ. ಇಡೀ ದೇಶದಲ್ಲಿ ಎಲ್ಲ ಕಡೆ ಪಕ್ಷದಲ್ಲಿ ಚುನಾವಣೆ ನಡೆಯುತ್ತಿದೆ. ಇಲ್ಲಿ ಎಲ್ಲರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದರು.
ವರಿಷ್ಠರ ಸೂಚನೆ ಎಲ್ಲರೂ ಪಾಲಿಸಬೇಕು ಪಕ್ಷದಲ್ಲಿ ಒಬ್ಬರು ಮತ್ತೊಬ್ಬರ ಮೇಲೆ ದೂರುವುದು ಬಹಳ ಬೇಸರ ಸಂಗತಿ. ರಾಷ್ಟ್ರೀಯ ನಾಯಕರು ನೀಡುವ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು. ಇಲ್ಲಿ ಎಲ್ಲರಿಗೂ ಅಭಿಪ್ರಾಯ ತಿಳಿಸುವ ಅವಕಾಶವಿದೆ. ಪಕ್ಷದಲ್ಲಿ ಇಂತಹ ಸಮಸ್ಯೆಗಳಿಂದಾಗಿ ಹಿನ್ನಡೆ ಉಂಟಾಗಿದೆ. ಕೆಲವೇ ದಿನಗಳಲ್ಲಿ ಇದು ಬಗೆಹರಿಯಲಿದೆ ಎಂದರು. ನಾನು ಯಾರನ್ನೂ ಭೇಟಿ ಮಾಡಿಲ್ಲ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ರಾಜಕೀಯ ಪಕ್ಷವಲ್ಲ. ನಾನು ಅಲ್ಲಿಗೆ ಹೋಗಿ ಸಲಹೆ ನೀಡಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ಸುಳ್ಳು. ಅಂತಹ ವ್ಯವಸ್ಥೆ ಆರ್ಎಸ್ಎಸ್ನಲ್ಲಿ ಇಲ್ಲ. ನಾನು ಯಾರನ್ನೂ ಭೇಟಿ ಮಾಡಿಲ್ಲ. ರಾಜ್ಯಾಧ್ಯಕ್ಷರ ವಿಚಾರದಲ್ಲಿ ಪಕ್ಷದ ಹಿರಿಯ ನಾಯಕರು ಎಲ್ಲವನ್ನೂ ತೀರ್ಮಾನಿಸುತ್ತಾರೆ ಎಂದರು.
ಯತ್ನಾಳ್ ಬಣದಿಂದ ಒಬ್ಬರು ಸ್ಪರ್ಧೆ ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರು ಇದ್ದಾರೆ. ಅವರ ವಿರುದ್ಧ ಸಾಕಷ್ಟು ಅಪಸ್ವರಗಳು ಕೇಳಿ ಬಂದಿವೆ. ಶಾಸಕ ಯತ್ನಾಳ್ ಮತ್ತವರ ಬಣದ ಸದಸ್ಯರು ಬಹಿರಂಗವಾಗಿಯೇ ಮುನಿಸು ವ್ಯಕ್ತಪಡಿಸಿದ್ದಾರೆ. ಒಬ್ಬರು ಮತ್ತೊಬ್ಬರ ಬಗ್ಗೆ ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿದರೆ ಯತ್ನಾಳ್ ಬಣದಿಂದ ಒಬ್ಬರು ಸ್ಪರ್ಧಿಸಲಿದ್ದಾರೆ. ಈ ಮಧ್ಯೆ ಆರ್. ಅಶೋಕ್ ಅವರು ಸಹ ಆಕಾಂಕ್ಷಿ ಎಂಬ ಮಾತುಗಳು ಕೇಳಿ ಬಂದ ಹಿನ್ನಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ..