ಮಡಿಕೇರಿ: ಸ್ಥಳೀಯರ ಬೇಡಿಕೆಯಂತೆ ಅರಣ್ಯ ಇಲಾಖೆ ಕೊಡಗು ಜಿಲ್ಲೆಯ ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆರಾಲು ಗ್ರಾಮ ಮತ್ತು ಸುತ್ತಮುತ್ತಲು ಹುಲಿ ಸೆರೆ ಹಿಡಿಯುವ ಕಾರ್ಯಚರಣೆ ಆರಂಭಿಸಿದೆ. ಈ ಕಾರ್ಯಾಚರಣೆಗಾಗಿ ದುಬಾರೆ ಸಾಕಾನೆ ಶಿಬಿರದಿಂದ ಗೋಪಿ ಮತ್ತು ಶ್ರೀರಾಮ ಎಂಬ ಎರಡು ಸಾಕಾನೆಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ ಸ್ಥಳಕ್ಕೆ ಭೇಟಿ ನೀಡಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ವೀಕ್ಷಿಸಿದರು. ತೆರಾಲು ಗ್ರಾಮ ವ್ಯಾಪ್ತಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸ್ಥಳೀಯರ ಜೊತೆ ಶಾಸಕರು ಸುದೀರ್ಘವಾಗಿ ಚರ್ಚಿಸಿದರು. ತೆರಾಲು, ಟಿ. ಶೆಟ್ಟಿಗೇರಿ, ಶ್ರೀಮಂಗಲ ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ಹುಲಿಯು ಆಗಾಗ ಕಾಣಿಸಿಕೊಳ್ಳುತ್ತಿದ್ದು, ಜನರು ಭಯದಿಂದ ಜೀವಿಸುವಂತಾಗಿದೆ. ಆದ್ದರಿಂದ ಹುಲಿಯನ್ನು ಸೆರೆ ಹಿಡಿಯುವಂತಾಗಬೇಕು ಎಂದು ಸ್ಥಳೀಯರು ಮನವಿ ಮಾಡಿದರು. ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ನೆಹರು ಅವರು ಅರಣ್ಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಸ್ಥಳೀಯರು ಒಳಗೊಂಡ ವಾಟ್ಸಪ್ ಗುಂಪು ಮಾಡಿ, ತಕ್ಷಣವೇ ಮಾಹಿತಿ ನೀಡಿದ್ದಲ್ಲಿ ಹುಲಿಯನ್ನು ಸೆರೆ ಹಿಡಿಯಲು ಸಹಕಾರಿಯಾಗುತ್ತದೆ. ಸ್ಥಳೀಯರು ಸಹಕರಿಸಬೇಕು ಎಂದು ಕೋರಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಮಾತನಾಡಿ, “ಇರ್ಪುವಿನಿಂದ ಕೂಟಿಯಾಲವರೆಗೂ ಹುಲಿಯ ಚಲನವಲನದ ಬಗ್ಗೆ ನಿಗಾವಹಿಸಲಾಗುವುದು. ಈ ಸಂಬಂಧ ಕ್ಯಾಂಪ್ಗಳನ್ನು ಮಾಡಿ ಹುಲಿ ಸೆರೆ ಹಿಡಿಯಲು ಕಾರ್ಯಾಚರಣೆ ಕೈಗೊಳ್ಳಲಾಗಿದೆ” ಎಂದು ವಿವರಿಸಿದರು.
“ತೆರಾಲು ಭಾಗವು ಬ್ರಹ್ಮಗಿರಿ ವನ್ಯಜೀವಿ ವ್ಯಾಪ್ತಿಯಲ್ಲಿ ಬರಲಿದ್ದು, ಕಾಡಂಚಿನಲ್ಲಿ ವಾಸಿಸುವ ಜನರಿಗೆ ಸುರಕ್ಷತೆ ಒದಗಿಸುವುದು ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ” ಶಾಸಕ ಎ. ಎಸ್. ಪೊನ್ನಣ್ಣ ಅಧಿಕಾರಿಗಳಿಗೆ ಸೂಚಿಸಿದರು. “ಬಡವರು, ಆದಿವಾಸಿಗಳು ಸಹ ವಾಸಿಸಬೇಕು. ಆ ನಿಟ್ಟಿನಲ್ಲಿ ಭೂಮಿ ಒದಗಿಸಬೇಕು. ಆದಿವಾಸಿಗಳಿಗೆ ವಸತಿ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಭರವಸೆ ನೀಡಲಾಗಿದೆ. ಅದರಂತೆ ನಡೆದುಕೊಳ್ಳಬೇಕು. ಮಾನವೀಯತೆಯಿಂದ ನೋಡಬೇಕು” ಎಂದು ಎ. ಎಸ್. ಪೊನ್ನಣ್ಣ ಹೇಳಿದರು. ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಗೆ ದುಬಾರೆ ಸಾಕಾನೆ ಶಿಬಿರದಿಂದ ಗೋಪಿ ಮತ್ತು ಶ್ರೀರಾಮ ಎಂಬ ಎರಡು ಸಾಕಾನೆಗಳನ್ನು ಬಳಸಿಕೊಳ್ಳಲಾಗಿದೆ. 5 ದಿನಗಳಿಂದ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸಲಾಗಿದೆ.
ಹುಲಿ ಸೆರೆ ಹಿಡಿಯುವ ಸಂಬಂಧ ಅರಣ್ಯ ಸಚಿವರ ಜೊತೆ ಚರ್ಚಿಸಲಾಗಿದ್ದು, ಎರಡು ಹುಲಿಯನ್ನು ಸೆರೆ ಹಿಡಿಯಲು ಅನುಮತಿ ದೊರೆತಿದೆ. ಆ ನಿಟ್ಟಿನಲ್ಲಿ ಕಾರ್ಯಾಚರಣೆ ಆರಂಭವಾಗಿದೆ. ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುವ ಅರಣ್ಯ ಸಿಬ್ಬಂದಿಗಳ ಜೊತೆ ಚರ್ಚಿಸಿದ ಎ. ಎಸ್. ಪೊನ್ನಣ್ಣ ಅರಣ್ಯ ಇಲಾಖೆ ಸಿಬ್ಬಂದಿಗಳು, ಪೊಲೀಸರು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುವುದು ಶ್ಲಾಘನೀಯ. ತಮ್ಮ ರಕ್ಷಣೆ ಜೊತೆಗೆ ಕಾಡಂಚಿನ ಜನರ ರಕ್ಷಣೆಯೂ ಅತ್ಯಗತ್ಯ. ಆ ನಿಟ್ಟಿನಲ್ಲಿ ಕಾಡಂಚಿನ ಜನರ ಆತಂಕವನ್ನು ದೂರ ಮಾಡಿ ಹುಲಿಯನ್ನು ಸೆರೆ ಹಿಡಿಯುವಂತಾಗಬೇಕು ಎಂದರು. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಸಂಕೇತ್ ಪೂವಯ್ಯ ಮಾತನಾಡಿ, “ಕೊಡಗು ಜಿಲ್ಲೆಯಲ್ಲಿ ಹಿಂದಿನಿಂದಲೂ ವನ್ಯಜೀವಿ ಹಾಗೂ ಮಾನವ ಸಂಘರ್ಷ ಇದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಶಾಸಕರು ಪ್ರಯತ್ನಿಸಿದ್ದಾರೆ. ಆ ನಿಟ್ಟಿನಲ್ಲಿ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು. ಮಾಕುಟ್ಟ-ಶ್ರೀಮಂಗಲ ವನ್ಯಜೀವಿ ವಿಭಾಗ, ತಿತಿಮತಿ ಆರ್ಆರ್ಟಿ ವಿಭಾಗ ಹಾಗೂ ಇಟಿಎಪ್ ವಿಭಾಗ ಸೇರಿದಂತೆ ಒಟ್ಟು 60 ಸಿಬ್ಬಂದಿಗಳು ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರು ಭಯದ ವಾತಾವರಣದಲ್ಲಿ ವಾಸಿಸುವಂತಾಗಿದೆ. ಹುಲಿ ಹಾಗೂ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಈ ಸಂಬಂಧ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಜನರು ಆಗ್ರಹಿಸಿದರು.