ರಾಯಚೂರು: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5 ಸಾವಿರ ಕೋಟಿ ಅನುದಾನದಲ್ಲಿ ಎಷ್ಟು ಬಿಡುಗಡೆ ಮಾಡಿದ್ದಾರೆ.? 3 ಸಾವಿರ ಕೋಟಿ, 2 ಸಾವಿರ ಕೋಟಿ ಕೊಟ್ಟಿದ್ದೇನೆ ಅಂತ ರಾಜ್ಯದ ಮುಖ್ಯಮಂತ್ರಿಗಳು ಹೇಳ್ತಾರೆ. ಶ್ವೇತಪತ್ರ ಹೊರಡಿಸಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಪ್ರವಾಸ ಹಾಗೂ ಮಿಸ್ ಕಾಲ್ ಸದಸ್ಯತ್ವದ ಅಭಿಯಾನಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಇಟ್ಟಿರುವಂತಹ ಹಣವನ್ನು ಎಲ್ಲೆಲ್ಲಿ ಕಲ್ಯಾಣ ಮಾಡಿದ್ದೀರಿ. ಯಾವ ರಸ್ತೆ ಅಭಿವೃದ್ಧಿ ಆಗಿದೆ. ಯಾವ ಶಾಲೆ ಕಟ್ಟಡ ಕಟ್ಟಿದ್ದೀರಿ. ಯಾವ ಬಸ್ ಸ್ಟ್ಯಾಂಡ್ ನಿರ್ಮಾಣ ಮಾಡಿದ್ದೀರಿ. ಕಲ್ಯಾಣ ಕರ್ನಾಟಕಕ್ಕೆ ಏನೇನು ಅಭಿವೃದ್ಧಿ ಕೆಲಸಗಳು ಆಗಿವೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಅತ್ಯಂತ ತೀಕ್ಷ್ಣವಾಗಿ ಪ್ರಶ್ನಿಸಿದರು.
ಕಳೆದ ಹತ್ತು ದಿನಗಳಿಂದ ಸರ್ಕಾರದಲ್ಲಿರುವ ಹಿರಿಯ ಸ್ವಪಕ್ಷಿಯ ಶಾಸಕರೇ ಸರ್ಕಾರ ವಿರುದ್ಧ ಗರಂ ಆಗಿದ್ದಾರೆ. ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ವೈಫಲ್ಯಗಳ ಬಗ್ಗೆ ಹಾಗೂ ಸರ್ಕಾರದಲ್ಲಿರುವ ಶಾಸಕರನ್ನು ಆಡಳಿತ ಪಕ್ಷ ಕಡೆಗಣಿಸುತ್ತಿದೆ ಎಂದು ಬೇಸರ ಹೊರ ಹಾಕಿದ್ದಾರೆ. ಮಧ್ಯವರ್ತಿಗಳನ್ನ ಇಟ್ಕೊಂಡು ಕಮಿಷನ್ ಪಡೆದುಕೊಂಡು ಅಧಿಕಾರ ನಡೆಸುತ್ತಿದೆ ಎಂದು ಅವರು ಆರೋಪಿಸಿದರು.