ನೇಪಾಳದಲ್ಲಿ ಹಿಂಸಾಚಾರದ ಬಳಿಕ ಸಾಮಾಜಿಕ ಜಾಲತಾಣ ಮತ್ತೆ ಮುಕ್ತ | Social Media Ban Conflict

ನೇಪಾಳದಲ್ಲಿ ಹಿಂಸಾಚಾರದ ಬಳಿಕ ಸಾಮಾಜಿಕ ಜಾಲತಾಣ ಮತ್ತೆ ಮುಕ್ತ | Social Media Ban Conflict

ನೇಪಾಳ: ಇತ್ತೀಚಿಗಷ್ಟೆ ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸಿದ್ದ ಕ್ರಮವನ್ನು ಇದೀಗ ಸರ್ಕಾರ ಹಿಂತೆಗೆದುಕೊಂಡಿದೆ. ಸರ್ಕಾರ ವಿಧಿಸಿದ ನಿಷೇಧ ಕ್ರಮದ ವಿರುದ್ಧ ಜೆನ್ ಝೆಡ್ (ಯುವಜನತೆ) ಬೀದಿಗಿಳಿದು ಪ್ರತಿಭಟಿಸಿದ್ದರ ಪರಿಣಾಮ ಸರ್ಕಾರ ವಾಪಸ್ ತೆಗೆದುಕೊಂಡಿದೆ.

ಸೋಮವಾರ ಪೊಲೀಸರು ಮತ್ತು ಜನರ ನಡುವಿನ ಸಂಘರ್ಷದಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೇ, 300ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಂಭೀರ ಪರಿಸ್ಥಿತಿಯ ನಡುವೆ ಗೃಹ ಸಚಿವ ರಮೇಶ್ ಲೇಖಕ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

ನೇಪಾಳಿ ಸೇನೆಯನ್ನು ರಾಜಧಾನಿ ಕಠ್ಮಂಡುವಿನಲ್ಲಿ ನಿಯೋಜಿಸಲಾಗಿತ್ತು. ನ್ಯೂ ಬನೇಶ್ವರ್ನಲ್ಲಿರುವ ಸಂಸತ್ ಸಂಕೀರ್ಣದ ಸುತ್ತಲಿನ ರಸ್ತೆಗಳನ್ನು ಸೇನೆ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು.

ಜನರ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ಕೆ.ಪಿ.ಶರ್ಮಾ ಓಲಿ, ಶಾಂತಿಯುತ ಪ್ರತಿಭಟನೆಯಲ್ಲಿ ಕೆಲವು ಅನಗತ್ಯ ವಿಚಾರಗಳ ಮಧ್ಯಪ್ರವೇಶ ಆಗಿತ್ತು. ಈ ಬೆಳವಣಿಗೆಯಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗುವುದನ್ನು ತಡೆಯಲು ಸರ್ಕಾರ ಬಲವಂತವಾಗಿ ಕ್ರಮ ಕೈಗೊಳ್ಳಬೇಕಾಯಿತು ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ಉದ್ದೇಶ ಇರಲಿಲ್ಲ. ಆದರೆ ಅವುಗಳನ್ನು ನಿಯಂತ್ರಿಸುವ ಗುರಿ ಇತ್ತಷ್ಟೇ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ. ಘಟನಾವಳಿಗಳ ಕುರಿತು ಮುಂದಿನ 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿ ತನಿಖಾ ಸಮಿತಿ ರಚಿಸಲಾಗುವುದು ಎಂದು ಪ್ರಧಾನಿ ಓಲಿ ಘೋಷಿಸಿದ್ದಾರೆ.

ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ನೇಪಾಳದ ಸಂವಹನ, ಮಾಹಿತಿ ಮತ್ತು ಪ್ರಸಾರ ಸಚಿವರಾದ ಪೃಥ್ವಿ ಸುಬ್ಬಾ ಗುರುಂಗ್ ಅವರು ತುರ್ತು ಸಚಿವ ಸಂಪುಟ ಸಭೆಯ ನಂತರ ಸರ್ಕಾರ ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ ಎಂದು ಪ್ರಕಟಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *