ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದ್ದು, ಖಾಸಗಿ ಸಘ ಸಂಸ್ಥೆಗಳು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು ಬದ್ದವಾಗಿ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ RSS ಹೆಸರು ಉಲ್ಲೇಖ ಮಾಡದೆ ಅದರ ಕಾರ್ಯ ಚಟುವಿಟಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.
ತಮಿಳುನಾಡು ಮಾದರಿಯಲ್ಲೇ ಕ್ರಮ
2013 ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರ, ತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಧಾರದಂತೆ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ ನಿಯಮ ತರಲು ಮುಂದಾಗಿದ್ದು, ತನ್ನ ತೀರ್ಮಾನದಲ್ಲಿ ಎಲ್ಲಿಯೂ ಆರ್ಎಸ್ಎಸ್ ಪದ ಬಳಕೆ ಮಾಡದೇ ಸರ್ಕಾರ ಖಾಸಗಿ ಸಂಸ್ಥೆಗಳು ಎಂದು ಉಲ್ಲೇಖಿಸಿ ಜಾಣ್ಮೆ ನಡೆ ಅನುಸರಿಸಿದೆ.
ಈ ನಿಯಮ ಜಾರಿಯಾದರೆ ಆರ್ಎಸ್ಎಸ್ ಮಾತ್ರವಲ್ಲ ಖಾಸಗಿ ಸಂಘ ಸಂಸ್ಥೆಗಳು / ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸುವುದಕ್ಕೆ ಕಡಿವಾಣ ಬೀಳಲಿದೆ. ಯಾರೇ ಯಾವುದೇ ಕಾರ್ಯಕ್ರಮ ಮಾಡುವುದಾದರೂ ಅನುಮತಿ ಪಡೆಯಬೇಕಾಗುತ್ತದೆ.
ಇನ್ನು ಕ್ಯಾಬಿನೆಟ್ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನ ಮಾಡಲು ಅನುಮತಿ ಪಡೆಯಬೇಕು .ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಯಾವುದೇ ಸಂಘಟನೆಗಳು ,ಧರ್ಮದವರು ಅನುಮತಿ ಪಡೆಯಲೇಬೇಕು. ಈ ಸಂಬಂಧ ಸಂಬಂಧ ಹೊಸ ನಿಯಮಗಳನ್ನು ಕಾನೂನಾತ್ಮಕವಾಗಿ ಜಾರಿ ತರಲಾಗುವುದು. ಕಾನೂನು ನಮಗೂ, ನಿಮಗೂ, ಎಲ್ಲರಿಗೂ ಒಂದೇ. ಅನುಮತಿ ಪಡೆದು ಕಾರ್ಯಕ್ರಮ ಮಾಡಲು ಏನು ತೊಂದರೆ. ಯಾವುದೇ ತೊಂದರೆ ಆಗೋದಿಲ್ಲ ಎಂದರೆ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ಕೊಡುತ್ತಾರೆ ಎಂದರು.
ಶಾಲೆ, ಸರ್ಕಾರಿ ಜಾಗ, ಅನುದಾನಿತ ಶಿಕ್ಷಣ ಸಂಸ್ಥೆಗಳು ಯಾವುದೇ ಚಟುವಟಿಕೆಗೆ ಅವಕಾಶ ಇಲ್ಲ. ಹಿಂದೆ ಕೆಲವು ಅದೇಶಗಳನ್ನ ಕ್ರೂಢೀಕರಿಸಿ ಹೊಸ ಕಾನೂನು ಜಾರಿಗೆ ತರುತ್ತೇವೆ. ಸಂಘ ಸಂಸ್ಥೆಗಳ ನಿಯಂತ್ರಣ ಮಾಡುವುದು ಸಾಧ್ಯವಿಲ್ಲ. ಆದರೆ ಸರ್ಕಾರದ ಜಾಗದಲ್ಲಿ ಕಾರ್ಯಕ್ರಮ ಮಾಡಲು ಸಾಧ್ಯವಿಲ್ಲ. ಅನುಮತಿ ಪಡೆದು ಕಾರ್ಯಕ್ರಮ ಮಾಡಬೇಕು. ಲಾಠಿ ಬೀಸುವುದು, ಪಥ ಸಂಚಲನ ಹೋಗುವುದು ಸಾಧ್ಯವಿಲ್ಲ ಎಂದು ಹೇಳಿದರು. ಈ ಮೂಲಕ ಹೆಸರು ಉಲ್ಲೇಖಿಸದೇ ಆರ್ ಎಸ್ಎಸ್ ಸಾರ್ವಜನಿಕ ಸ್ಥಳಗಳಲ್ಲಿ ತನ್ನ ಕಾರ್ಯಚಟುವಟಿಗಳನ್ನು ಮಾಡುವಂತಿಲ್ಲ ಎಂದು ಹೇಳಿದರು.
ಈಶ್ವರ್ ಖಂಡ್ರೆ ಹೇಳಿದ್ದೇನು?
ಇನ್ನು ಸಭೆ ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಅನಧಿಕೃತ ಕಾರ್ಯಕ್ರಮ ಕೋಮು ಸಂಘರ್ಷಕ್ಕೆ ಕಾರಣವಾಗುತ್ತದೆ. ಪ್ರಿಯಾಂಕ್ ಬಗ್ಗೆ RSSನವರು ತುಂಬಾ ಲಘುವಾಗಿ ಮಾತನಾಡಿದ್ದಾರೆ. ಪ್ರಾಯೋಜಿತ ಆರ್ಎಸ್ಎಸ್ನ ನಿಜ ಬಣ್ಣ ಬಯಲಾಗಿದೆ. ಅಂತಹವರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸಬೇಕು . ಇತರ ಸರ್ಕಾರದ ಜಾಗದಲ್ಲಿ ಅನಧಿಕೃತ ಕಾರ್ಯಕ್ರಮ ಮಾಡುವುದು ಕೋಮು ಸಂಘರ್ಷಕ್ಕೆ ಕಾರಣವಾಗುತ್ತದೆ. ಇದರ ಬಗ್ಗೆ ಕಾನೂನು ಸಚಿವರು ಸುದೀರ್ಘವಾಗಿ ಮಾತನಾಡ್ತಾರೆ ಎಂದರು.
ಪ್ರಿಯಾಂಕ್ ಖರ್ಗೆ ಮನವಿಗೆ ಸ್ಪಂದಿಸಿದ ಸರ್ಕಾರ
ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಸಂಬಂಧ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ್ದರು. ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ಎಸ್ ಕಾರ್ಯಚಟುವಟಿಕೆಗಳನ್ನು ರದ್ದುಗೊಳಿಸಬೇಕೆಂದು ಪತ್ರದ ಮೂಲಕ ಮನವಿ ಮಾಡಿದ್ದರು. ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಭಾರೀ ವಿವಾದ ಸೃಷ್ಟಿಸಿದ್ದು, ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಪ್ರಿಯಾಂಕ್ ಖರ್ಗೆ ನಡೆಯನ್ನು ಕಟುವಾಗಿ ಖಂಡಿಸಿದೆ. ಅಲ್ಲದೇ ಖರ್ಗೆಗೆ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ.ಇದರ ನಡುವೆಯೂ ಸಹ ಇದೀಗ ಸಿದ್ದರಾಮಯ್ಯ ಸರ್ಕಾರ ಖರ್ಗೆ ಮನವಿಗೆ ಸ್ಪಂದಿಸಿದ್ದು, ಈ ಸಂಬಂಧ ಇಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಮಹತ್ವದ ತೀರ್ಮಾನ ಕೈಗೊಂಡಿದೆ.
For More Updates Join our WhatsApp Group :




