ಸುಪ್ರೀಂನಲ್ಲಿ ಯತ್ನಾಳ್‌ಗೆ ಜಯ.

ಸುಪ್ರೀಂನಲ್ಲಿ ಯತ್ನಾಳ್‌ಗೆ ಜಯ.

ಹಮೀದ್ ಮುಶ್ರೀಫ್ ಅರ್ಜಿ ವಜಾ.

ವಿಜಯಪುರ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಮುಖಭಂಗವಾಗಿದೆ. ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯುವ ಮೂಲಕ ಯತ್ನಾಳ್ ಅವರ ಶಾಸಕ ಸ್ಥಾನದ ಮೇಲಿದ್ದ ತೂಗುಗತ್ತಿ ದೂರವಾಗಿದೆ.ಕಳೆದ ಚುನಾವಣೆಯಲ್ಲಿ ಯತ್ನಾಳ್ ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಅಬ್ದುಲ್ ಹಮೀದ್ ಮುಶ್ರೀಫ್ ಅವರು ಚುನಾವಣಾ ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕಲಬುರಗಿ ಹೈಕೋರ್ಟ್ ಪೀಠವು, ಕಳೆದ 2025ರ ಜುಲೈ 18 ರಂದು ಹಮೀದ್ ಮುಶ್ರೀಫ್ ಅವರ ಅರ್ಜಿಯನ್ನು ವಜಾ ಮಾಡಿತ್ತು. ಅಷ್ಟೇ ಅಲ್ಲದೆ, ಅರ್ಜಿದಾರರಿಗೆ ದಂಡವನ್ನೂ ವಿಧಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮುಶ್ರೀಫ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಈಗ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ಆದೇಶ ಸರಿಯಾಗಿದೆ ಎಂದು ತೀರ್ಪು ನೀಡಿ ಅರ್ಜಿಯನ್ನು ವಜಾಗೊಳಿಸಿದೆ.

ಯತ್ನಾಳ್ ಎಕ್ಸ್​​​ನಲ್ಲಿ ಟ್ವೀಟ್: “ಸತ್ಯಮೇವ ಜಯತೆ”

ಸುಪ್ರೀಂ ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಸಾಮಾಜಿಕ ಜಾಲತಾಣ X (ಟ್ವಿಟ್ಟರ್) ನಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧಿಗಳ ವಿರುದ್ಧ ಗುಡುಗಿದ್ದಾರೆ. “ಸತ್ಯಮೇವ ಜಯತೆ”. ನಾನು ಇಂತಹ ಗೊಡ್ಡು ಬೆದರಿಕೆಗಳಿಗೆ ಅಥವಾ ಸುಳ್ಳು ಕೇಸುಗಳಿಗೆ ಹೆದರುವವನಲ್ಲ,” ಎಂದು ಬರೆದುಕೊಂಡಿದ್ದಾರೆ. ರಾಜಕೀಯ ಪ್ರೇರಿತವಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡಿದವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವುದಾಗಿ ಮತ್ತು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದಾಗಿ ಅವರು ಎಚ್ಚರಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *