ಬೆಂಗಳೂರು ದಕ್ಷಿಣ ಪಾಲಿಕೆ ಕಾರ್ಯಾಚರಣೆ – ಕಠಿಣ ಎಚ್ಚರಿಕೆ
ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಜಯನಗರದ ಪ್ರಮುಖ ವಾಣಿಜ್ಯ ಸಂಕೀರ್ಣವು ಸುಮಾರು 15,000 ಚದರ ಅಡಿ ವಿಸ್ತೀರ್ಣವನ್ನು ಹೊಂದಿದ್ದು, ಇಲ್ಲಿ ಸುಮಾರು 270ಕ್ಕೂ ಹೆಚ್ಚು ಅಂಗಡಿಗಳಿವೆ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುವಂತೆ, ಸಂಕೀರ್ಣದ ಒಳಭಾಗದ ಕಾರಿಡಾರ್ಗಳು, ಪಾದಚಾರಿ ಮಾರ್ಗಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಅಂಗಡಿ ಮಾಲೀಕರು ಹಾಗೂ ಮಾರಾಟಗಾರರು ಅತಿಕ್ರಮಿಸಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದಿದ್ದವು.
ಎಚ್ಚರಿಕೆ ನಂತರ ದಂಡ ಪ್ರಯೋಗ
ಸಾರ್ವಜನಿಕ ದೂರುಗಳ ಆಧಾರದ ಮೇಲೆ ಕಳೆದ ಮೂರು ದಿನಗಳಿಂದ ವಾಣಿಜ್ಯ ಸಂಕೀರ್ಣದಲ್ಲಿನ ಅಂಗಡಿ ಮಾಲೀಕರಿಗೆ ತಮ್ಮ ವ್ಯಾಪ್ತಿಯನ್ನು ಮೀರಿದ ಅನಧಿಕೃತ ಒತ್ತುವರಿಯನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸುವಂತೆ ನಿರಂತರವಾಗಿ ಪಾಲಿಕೆ ವತಿಯಿಂದ ಜಾಗೃತಿ ಮೂಡಿಸಲಾಗಿತ್ತು.
ಅರಿವು ಮೂಡಿಸಿದ ಹೊರತಾಗಿಯೂ, ಒತ್ತುವರಿ ಮುಂದುವರೆಸಿದಂಥ ಅಂಗಡಿ ಮಾಲೀಕರ ವಿರುದ್ಧ ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗಿರುತ್ತದೆ. ಕಾರಿಡಾರ್ ಮತ್ತು ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸಿದ್ದಕ್ಕಾಗಿ ಒಟ್ಟು 39 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಉಲ್ಲಂಘನೆದಾರರಿಗೆ ಅಧಿಕಾರಿಗಳಿಂದ ರೂ.88,200/- ದಂಡ ವಿಧಿಸಲಾಗಿರುತ್ತದೆ ಎಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತರಾದ ಶ್ರೀ ಕೆ ಎನ್ ರಮೇಶ್ ರವರು ತಿಳಿಸಿದರು.
ಒತ್ತುವರಿ ಮುಂದುವರೆದರೆ ವಾಣಿಜ್ಯ ಪರವಾನಿಗೆ ರದ್ದು
ವಾಣಿಜ್ಯ ಸಂಕೀರ್ಣದ ಎಲ್ಲಾ ಅಂಗಡಿ ಮಾಲೀಕರಿಗೆ ಈ ಮೂಲಕ ಸ್ಪಷ್ಟ ಎಚ್ಚರಿಕೆಯನ್ನು ನೀಡಿದ್ದು, ಸಾರ್ವಜನಿಕ ಸ್ಥಳಗಳ ಒತ್ತುವರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಸಂದೇಶವನ್ನು ನೀಡಲಾಗಿದೆ ಹಾಗೂ ಸಂಪೂರ್ಣವಾಗಿ ಒತ್ತುವರಿ ತೆರವುಗೊಳಿಸುವವರೆಗೂ ಈ ವಿಶೇಷ ಕಾರ್ಯಾಚರಣೆಯನ್ನು ಮುಂದುವರೆಸಲಾಗುವುದು.
ಮುಂದಿನ ದಿನಗಳಲ್ಲಿಯೂ ಸಹ ಒತ್ತುವರಿ ಕಂಡುಬಂದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕಠಿಣ ಕಾನೂನು ಕ್ರಮದ ಜೊತೆಗೆ ಪರವಾನಗಿ ರದ್ದುಪಡಿಸುವಂತಹ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
For More Updates Join our WhatsApp Group :




