ಬೆಂಗಳೂರು ಭದ್ರತಾ ಅಲರ್ಟ್: ಪ್ರಧಾನಿ ಮೋದಿ ಮಾರ್ಗದಲ್ಲಿ ಸ್ಫೋಟಕ ಪತ್ತೆ ಪ್ರಕರಣ ಗಂಭೀರವಾಗಿ ಪರಿಗಣನೆ
ಬೆಂಗಳೂರು : ಪ್ರಧಾನಮಂತ್ರಿ Narendra Modi ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಘಟನೆ ರಾಜ್ಯ ಮತ್ತು ಕೇಂದ್ರ ಭದ್ರತಾ ಸಂಸ್ಥೆಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. Bengaluru ಸಮೀಪದ ವಡೇರಹಳ್ಳಿ ಗೇಟ್ ಬಳಿ ಸ್ಫೋಟಕ ಸಾಮಗ್ರಿ ಪತ್ತೆಯಾದ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಷ್ಟ್ರೀಯ ತನಿಖಾ ದಳ (NIA), ರಾ (RAW), ಐಬಿ (IB) ಹಾಗೂ ಎನ್ಎಸ್ಜಿ (NSG) ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಎನ್ಐಎ ಡಿವೈಎಸ್ಪಿ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ಅಧಿಕಾರಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದೆ. ಪ್ರಧಾನಿ ಭದ್ರತೆಯ ಹೊಣೆ ಹೊತ್ತಿರುವ ಎನ್ಎಸ್ಜಿ ಕೂಡ ರಾಜ್ಯ ಪೊಲೀಸರಿಂದ ವರದಿ ಕೇಳಿಸಿಕೊಂಡಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್ಗಳನ್ನು ಉದ್ದೇಶಪೂರ್ವಕವಾಗಿ ಅಲ್ಲಿ ಇಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಸ್ಫೋಟಕಗಳನ್ನು ಯಾವ ಸಮಯದಲ್ಲಿ ಇರಿಸಲಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನಾ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇಲ್ಲದಿರುವುದು ತನಿಖೆಗೆ ಅಡ್ಡಿಯಾಗಿದ್ದು, ರಸ್ತೆ ಪ್ರವೇಶ ಹಾಗೂ ನಿರ್ಗಮನ ದ್ವಾರಗಳಲ್ಲಿನ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಕಗ್ಗಲಿಪುರ ಠಾಣೆ ಪೊಲೀಸರು ಮತ್ತು ಎನ್ಐಎ ಅಧಿಕಾರಿಗಳು ಜಂಟಿಯಾಗಿ ತನಿಖೆ ಮುಂದುವರಿಸಿದ್ದು, ಅಂತರರಾಜ್ಯ ಸಂಪರ್ಕ ಅಥವಾ ಸಂಚು ಇದೆಯೇ ಎಂಬ ನಿಟ್ಟಿನಲ್ಲಿ ‘ರಾ’ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ದೇಶದ ಪ್ರಧಾನಿಯ ಭದ್ರತೆಯ ನಡುವೆ ಸಂಭವಿಸಿದ ಈ ಘಟನೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಆರೋಪಿಗಳ ಪತ್ತೆಗೆ ಭದ್ರತಾ ಸಂಸ್ಥೆಗಳು ಬಲೆ ಬೀಸಿವೆ.
For More Updates Join our WhatsApp Group :



