ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ: ನೀಟ್ ಹಗರಣಕ್ಕೆ ಎಸ್. ಮಧು ಬಂಗಾರಪ್ಪ ಟೀಕೆ.!
ಬೆಂಗಳೂರು : ಕೇಂದ್ರ ಸರ್ಕಾರವು ನೀಟ್ ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿರುವ ಹಾಗೂ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್ ಮಧು ಬಂಗಾರಪ್ಪ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಯು ಪದೇ ಪದೇ ಹಳ್ಳ ಹಿಡಿಯುತ್ತಿರುವುದು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಪರೀಕ್ಷೆ ಬರೆದಿದ್ದ ಲಕ್ಷಾಂತರ ಮಕ್ಕಳ ಮೇಲೆ ಈ ದಿಢೀರ್ ‘ಮರುಪರೀಕ್ಷೆ’ಯ ನಿರ್ಧಾರವು ಗದಾಪ್ರಹಾರದಂತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

“ನಾವು ಶಾಲಾ ಮಟ್ಟದಲ್ಲಿ ಮಕ್ಕಳ ಶೈಕ್ಷಣಿಕ ಹಾಗೂ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ನಿರಂತರವಾಗಿ ಪ್ರಯತ್ನಿಸುತ್ತಿದ್ದೇವೆ. ಆದರೆ, ಕೇಂದ್ರ ಸರ್ಕಾರದ ಇಂತಹ ಬೇಜವಾಬ್ದಾರಿಯುತ ನಿರ್ಧಾರಗಳು ಮಕ್ಕಳನ್ನು ಮತ್ತು ಪೋಷಕರನ್ನು ಹತಾಶೆಯ ಕೂಪಕ್ಕೆ ತಳ್ಳುತ್ತಿವೆ,” ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.
“ಕೇಂದ್ರ ಸರ್ಕಾರವು ಕೇವಲ ಸಿಬಿಐ ತನಿಖೆಗೆ ಆದೇಶಿಸಿ ಕೈತೊಳೆದುಕೊಂಡರೆ ಸಾಲದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಭದ್ರವಾದ ಹಾಗೂ ಪಾರದರ್ಶಕವಾದ ಪರೀಕ್ಷಾ ವ್ಯವಸ್ಥೆಯೊಂದನ್ನು ರೂಪಿಸಬೇಕು. ಇಲ್ಲವಾದರೆ ಇಡೀ ಪರೀಕ್ಷಾ ಪದ್ಧತಿಯ ಮೇಲೆಯೇ ಜನಸಾಮಾನ್ಯರಿಗೆ ಇರುವ ನಂಬಿಕೆ ಸಂಪೂರ್ಣವಾಗಿ ನಾಶವಾಗಲಿದೆ,” ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.
For More Updates Join our WhatsApp Group :




