ಗಾಂಜಾ ಮಾರಲು ಹೋಗಿ ಪೊಲೀಸರಿಗೆ ತಗಲಾಕಿಕೊಂಡ ಪೆಡ್ಲರ್

ಗಾಂಜಾ ಮಾರಲು ಹೋಗಿ ಪೊಲೀಸರಿಗೆ ತಗಲಾಕಿಕೊಂಡ ಪೆಡ್ಲರ್

ದಕ್ಷಿಣ ಕನ್ನಡ : ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಸಾಗಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ, 4 ಕೆಜಿ ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಂಕನಾಡಿ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಪ್ರದೇಶದಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಗೋಳಿಯಂಗಡಿ ಮನೆ ನಿವಾಸಿ ಅಬುತಾಹಿರ್ ಅಲಿಯಾಸ್ ಅನ್ವರ್ (25) ಎಂದು ಗುರುತಿಸಲಾಗಿದೆ.

ಸುಮಾರು ₹1,00,000 ಮೌಲ್ಯದ 4 ಕೆಜಿ ಗಾಂಜಾ, ಸಾಗಾಟಕ್ಕೆ ಬಳಸಿದ್ದ ಹೊಂಡಾ ಆಕ್ಟಿವಾ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹1,75,000 ಎಂದು ಅಂದಾಜಿಸಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸಿಪಿ ಮನೋಜ್ ಕುಮಾರ್ ನಾಯಕ್ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್.ಎಂ, ಪಿಎಸ್ ಐ ನರೇಂದ್ರ, ಎಎಸ್ ಐಗಳಾದ ಮೋಹನ್ ಕೆ.ವಿ., ರಾಮ್ ಪೂಜಾರಿ, ಸುಜನ್ ಶೆಟ್ಟಿ ಹಾಗೂ ಸಿಸಿಬಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

Leave a Reply

Your email address will not be published. Required fields are marked *