ಬೆಂಗಳೂರು : ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ಮತ್ತೊಂದು ವಿಮಾನ ನಿಲ್ದಾಣವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ, ಕರ್ನಾಟಕ ಸರ್ಕಾರಕ್ಕಿಂತ ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ದೊಡ್ಡ ಪ್ಲಾನ್ ಮಾಡಿಕೊಳ್ಳುತ್ತಿದೆ. ಇದೀಗ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ತಮಕೂರು ಹಾಗೂ ನೆಲಮಂಗಲ ಜಿಲ್ಲೆಗಳು ಟಾಪ್ ಲಿಸ್ಟ್ನಲ್ಲಿವೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯಾವ ಜಿಲ್ಲೆ ಹಾಗೂ ಯಾವ ಜಾಗ ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದು ಅಂತಿಮವಾಗುತ್ತಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಹೌದು ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿಮಾರ್ಣ ಮಾಡುವ ನಿಟ್ಟಿನಲ್ಲಿ ಮಹತ್ವದ ಅಪ್ಡೇಟ್ ಆಗಿದೆ. ಬೆಂಗಳೂರಿನಲ್ಲಿ ಈಗ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಮುಂದಿನ ದಿನಗಳಲ್ಲಿ ಒತ್ತಡ ಜಾಸ್ತಿ ಆಗುವ ಸಾಧ್ಯತೆ ಇದೆ. ಹೀಗಾಗಿ, ಪರ್ಯಾಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಇದೀಗ ಎಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎನ್ನುವ ವಿಚಾರ ಫೈನ್ ಆಗುತ್ತಿದೆ. ಈ ಸಂಬಂಧ ಕೇಂದ್ರ ಸಚಿವ ವಿ. ಸೋಮಣ್ಣ ಎರಡು ಮಹತ್ವದ ಪ್ರಸ್ತಾಪಗಳನ್ನು ಸಲ್ಲಿಸಿರುವುದು ವರದಿಯಾಗಿದೆ.
ಈ ಸಂಬಂಧ ಮಾತನಾಡಿರುವ ವಿ. ಸೋಮಣ್ಣ ಅವರು, ತುಮಕೂರು ಜಿಲ್ಲೆಯಲ್ಲಿ ಎರಡನೇ ಬೆಂಗಳೂರು ವಿಮಾನ ನಿಲ್ದಾಣ ನಿರ್ಮಿಸಬೇಕು ಎನ್ನುವುದು ಮೊದಲ ಸಲಹೆಯಾಗಿದೆ. ಇನ್ನು ಇದಕ್ಕೆ ಪರ್ಯಾಯವಾಗಿ ಹೊಸ ಸೌಲಭ್ಯಗಳನ್ನು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಬೇಕು. ಇದಕ್ಕಾಗಿ ಬೆಂಗಳೂರಿನ ಹಳೆಯ ಎಚ್ಎಎಲ್ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಿ ಬಳಸಿಕೊಳ್ಳಬೇಕು ಎಂದೂ ಅವರು ಹೇಳಿದ್ದಾರೆ.
ಇನ್ನು ತುಮಕೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಿಸುವುದಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿರಬೇಕು. ಬೆಂಗಳೂರಿನ ನಂತರ ತುಮಕೂರು ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಎರಡನೇ ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ಬೇಕಾದರೆ ದಾಬಸ್ ಪೇಟೆಯಲ್ಲಿ ಅಥವಾ ನೆಲಮಂಗಲದಲ್ಲಿ ನಿರ್ಮಿಸಲಿ. ಈ ವಿಷಯದಲ್ಲಿ ನಮಗೆ ಯಾವುದೇ ಆಕ್ಷೇಪ ಇಲ್ಲ. ಆದರೆ ರಾಜ್ಯ ಸರ್ಕಾರವು ಇದಕ್ಕಾಗಿ ಬೇರೆ ಸ್ಥಳವನ್ನು ಆಯ್ಕೆ ಮಾಡಬಾರದು. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಇದೇ ವಾರ ಪತ್ರ ಬರೆಯಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಿಷಯಕ್ಕೆ ಸಂಬಂಧಿಸಿದಂತೆ ನಾನು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಆದರೆ ಹೆಸರನ್ನು ಸದ್ಯಕ್ಕೆ ನಾನು ಬಹಿರಂಗಪಡಿಸುವುದಿಲ್ಲ. ತಮಿಳುನಾಡು ಸರ್ಕಾರವು ಹೊಸೂರಿನಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸುವ ಬಗ್ಗೆ ವಿಸ್ತೃತ ಯೋಜನೆಯನ್ನು ಈಗಾಗಲೇ ಮಾಡಿದೆ. ತುಮಕೂರು ಮತ್ತು ನೆಲಮಂಗಲ ನಡುವೆ ವಿಮಾನ ನಿಲ್ದಾಣವನ್ನು ನಿರ್ಮಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ. ಎಚ್ಎಎಲ್ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಿ: ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಸ್ಥಳ ನಿಗದಿ ಮಾಡುವುದರ ಜೊತೆ ಜೊತೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದ ಅಭಿವೃದ್ಧಿಯೂ ಆಗಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ತಾಂತ್ರಿಕ ಮೂಲಸೌಕರ್ಯ ಇದೆ. ಈ ಸೌಲಭ್ಯಗಳನ್ನು ಇಂದಿನ ಅಗತ್ಯಕ್ಕೆ ಅನುಸಾರವಾಗಿ ಬದಲಾಯಿಸಬೇಕು. ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಿಸುವುದಕ್ಕಿಂತ ಇದು ಅತ್ಯಂತ ಉತ್ತಮ. ಈಗಾಗಲೇ ಇರುವ ವ್ಯವಸ್ಥೆಯನ್ನು ಅಭಿವೃದ್ಧಿ ಮಾಡಬೇಕು. ಇದರಿಂದ ವೆಚ್ಚವೂ ತಗ್ಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.