ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದೊಳಗಿನ ಅಧಿಕಾರ ಹಂಚಿಕೆ ಜಗಳ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವಂತೆ ಕಾಣುತ್ತಿದೆ. ಹೀಗಾಗಿ ರಾಜಕೀಯ ವಿದ್ಯಮಾನಗಳು ಬಿರುಸುಗೊಳ್ಳುತ್ತಿದೆ. ಈ ಮಧ್ಯೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಗೃಹ ಸಚಿವ ಜಿ. ಪರಮೇಶ್ವರ ಮಂಗಳವಾರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ. ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ, ಈ ವೇಳೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನವೇ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರನ್ನು ಬದಲಿಸಿ ಹೊಸ ರಾಜ್ಯ ಘಟಕದ ಅಧ್ಯಕ್ಷರನ್ನು ನೇಮಿಸಬೇಕೆಂದು ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ಶಿವಕುಮಾರ್ ಅವರನ್ನು ಬದಲಿಸಿ ಹಿಂದುಳಿದ ವರ್ಗಕ್ಕೆ ಸೇರಿದ ನಾಯಕರನ್ನು ನೇಮಕ ಮಾಡುವುದರಿಂದ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಪಕ್ಷಕ್ಕೆ ಪ್ರಯೋಜನಕಾರಿಯಾಗಲಿದೆ ಎಂದು ಅವರು ಸಲಹೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇನ್ನೂ ಇದೇ ವೇಳೆ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಪಾಳಯದೊಂದಿಗೆ ಗುರುತಿಸಿಕೊಂಡಿರುವ ಪರಮೇಶ್ವರ್, ಅಧಿಕಾರ ಹಂಚಿಕೆ’ ಒಪ್ಪಂದದ ಪ್ರಕಾರ ಪಕ್ಷವು ನಾಯಕತ್ವವನ್ನು ಬದಲಾಯಿಸಲು ಬಯಸಿದರೆ, ಸಿಎಂ ಹುದ್ದೆಗೆ ಹಿಂದುಳಿದ ವರ್ಗಗಳ ನಾಯಕರನ್ನು ಆಯ್ಕೆ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.