ಬೆಂಗಳೂರು: ಬೆಳಗಾವಿಯ ಸುವರ್ಣಸೌಧದ ಸಮೀಪ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮತ್ತು ಲಿಂಗಾಯತ ಉಪ ಪಂಗಡಗಳಿಗೆ ಒಬಿಸಿ ಮೀಸಲಾತಿ ಕೋರಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಪ್ರಕರಣವನ್ನು ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಸುವರ್ಣ ಸೌಧದ ಮುಂದೆ 2024ರ ಡಿಸೆಂಬರ್ 10ರಂದು ನಡೆದ ಲಾಠಿ ಚಾರ್ಜ್ ಘಟನೆಯನ್ನು ತನಿಖಾ ಆಯೋಗಕ್ಕೆ ವಹಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಾಗಲಕೋಟೆಯ ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ರಾಜ್ಯ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಬೇಕು. ಆಯೋಗವು ಕಾಲ ಮಿತಿಯಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಆದೇಶಿಸಲಾಗಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಪ್ರಕಟವಾಗಬೇಕಿದೆ.
ಅರ್ಜಿಯ ಕುರಿತು ಈ ಹಿಂದೆ ನಡೆದ ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ”ಸುವರ್ಣ ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಿದ್ದು, ನಿಗದಿತ ಸ್ಥಳ ತೊರೆಯದಂತೆ ಪ್ರತಿಭಟನಾಕಾರರಿಗೆ ಎಡಿಜಿಪಿ ಸೂಚಿಸುತ್ತಿರುವ ವಿಡಿಯೋ ಮತ್ತು ಚಿತ್ರಗಳಿವೆ. ಪ್ರತಿಭಟನಾಕಾರರು ಕಲ್ಲು ಮತ್ತು ಚಪ್ಪಲಿಗಳನ್ನು ಪೊಲೀಸರತ್ತ ಎಸೆದಿದ್ದಾರೆ. ಮದ್ಯ ಸೇವಿಸಿ, ಪೊಲೀಸರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋಗಳಿವೆ. ಪ್ರತಿಭಟನೆಗೆ ನಿಗದಿಯಾಗಿದ್ದ ಸ್ಥಳಕ್ಕೆ ಮರಳುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಪೊಲೀಸರಿಂದ ಲಾಠಿ ಕಸಿದುಕೊಂಡು ಅದರಿಂದ ಪೊಲೀಸರಿಗೆ ಹಲ್ಲೆ ಮಾಡುವ ದೃಶ್ಯಗಳಿವೆ. ರಾಷ್ಟ್ರೀಯ ಹೆದ್ದಾರಿ ತಡೆದು, ಫೆನ್ಸ್ ದಾಟುತ್ತಿರುವ ವಿಡಿಯೋಗಳಿವೆ. ಈ ಸಂಬಂಧ ಪೆನ್ಡ್ರೈವ್ ಅನ್ನು ನ್ಯಾಯಾಲಯಕ್ಕೆ ನೀಡಿದ್ದೇವೆ” ಎಂದು ವಾದಿಸಿದ್ದರು.
”ನ್ಯಾಯಾಲಯದ ಆದೇಶದ ಪ್ರಕಾರ ಶಾಂತಿಯುತವಾಗಿ ಪ್ರತಿಭಟಿಸಲು ಪ್ರತಿಭಟನಾಕಾರರಿಗೆ ಅನುಮತಿಸಲಾಗಿತ್ತು. ಇದನ್ನು ಮೀರಿ ಪ್ರತಿಭಟನೆಯಲ್ಲಿ ಕೆಲವು ಗಲಭೆಕೋರರು ಕಾನೂನು ಕೈಗೆ ತೆಗೆದುಕೊಂಡಿದ್ದಾರೆ. ಇದರಿಂದ 23 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ವಾಹನಗಳು ಜಖಂಗೊಂಡಿವೆ. ಲಾಠಿ ಚಾರ್ಜ್ ಆಗಿಲ್ಲ ಎಂದು ಹೇಳುತ್ತಿಲ್ಲ. ಲಾಠಿ ಚಾರ್ಜ್ ಮಾಡಿರುವುದು ಸಮರ್ಥನೀಯವೇ ಎಂಬುದು ಪ್ರಶ್ನೆಯಾಗಿದೆ” ಎಂದಿದ್ದರು. ಸ್ವಾಮೀಜಿ ಪರ ವಕೀಲರು, ”ನಿಷೇಧಾಜ್ಞೆ ವಿಧಿಸಿರುವಾಗಲೇ ನಿರ್ದಿಷ್ಟ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ನ್ಯಾಯಾಲಯವು ನಮಗೆ ಅನುಮತಿಸಿತ್ತು. ಸಚಿವರು ಮನವಿ ಸ್ವೀಕರಿಸಿದ ಬಳಿಕ ಪ್ರತಿಭಟನಾಕಾರರು ಹೊರಟಿದ್ದರು. ಆ ಸಂದರ್ಭದಲ್ಲಿ ಲಾಠಿ ಚಾರ್ಜ್ ಮಾಡಲಾಗಿದೆ. ಪ್ರತಿಭಟನೆಯಲ್ಲಿ ಧಾರ್ಮಿಕ ಮುಖಂಡರು, ಶಾಸಕರು ಮತ್ತು ಮಾಜಿ ಶಾಸಕರು ಭಾಗವಹಿಸಿದ್ದರು. ಹೀಗಿರುವಾಗ, ಅಲ್ಲಿ ಮದ್ಯ ಸೇವಿಸುತ್ತಿದ್ದರು, ಕಲ್ಲು ಎಸೆದಿದ್ದಾರೆ ಎಂದು ಸರ್ಕಾರ ಹೇಳಬಾರದು. ನಾವು ಎಲ್ಲಾ ವಿಡಿಯೋಗಳನ್ನು ಪರಿಶೀಲಿಸಿದ್ದು, ಎಲ್ಲವೂ ಲಾಠಿ ಚಾರ್ಜ್ ಆದ ಬಳಿಕದ ವಿಡಿಯೋಗಳಾಗಿವೆ. ಕಾರ್ಯಕಾರಿ ಮ್ಯಾಜಿಸ್ಟ್ರೇಟ್ ಉಪಸ್ಥಿತಿಯ ಬಗ್ಗೆ ಸರ್ಕಾರದ ಆಕ್ಷೇಪಣೆಯಲ್ಲಿ ವಿವರಿಸಲಾಗಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿರುವುದರಿಂದ ನಿಷ್ಪಕ್ಷಪಾತವಾದ ತನಿಖೆ ಅಗತ್ಯವಾಗಿದೆ. ಪ್ರತಿಭಟನೆ ಮೂಲಭೂತ ಹಕ್ಕಾಗಿದ್ದು, ಲಾಠಿ ಚಾರ್ಜ್ ಮೂಲಕ ಅದನ್ನು ಹತ್ತಿಕ್ಕಬಾರದಿತ್ತು” ಎಂದು ಪೀಠಕ್ಕೆ ತಿಳಿಸಿದ್ದರು.
ವಾದ, ಪ್ರತಿವಾದ ಆಲಿಸಿದ್ದ ಪೀಠ, ತೀರ್ಪು ಕಾಯ್ದಿರಿಸಿತ್ತು. ಶುಕ್ರವಾರ ಅದನ್ನು ಪ್ರಕಟಿಸಿದೆ.