ಬೆಂಗಳೂರು : ಕರ್ನಾಟಕ ರಾಜ್ಯ ಬಜೆಟ್ 2025-26 ನಲ್ಲಿ ಅಲ್ಪ ಪ್ರಮಾಣದ ಗೌರವ ಧನ ಹೆಚ್ಚಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಂದ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಬುಧವಾರ ನಡೆಯಿತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು.

ಎಐಟಿಯುಸಿ, ಟಿಯುಸಿಸಿ ಮತ್ತು ಎಐಯುಟಿಯುಸಿ ಕಾರ್ಮಿಕ ಸಂಘಟನೆಗಳ ಅಂಗನವಾಡಿ ನೌಕರರ ಸಂಘಟನೆಗಳ ಜಂಟಿ ವೇದಿಕೆಯಾದ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಜರುಗಿತು..
ಪ್ರಸಕ್ತ ಬಜೆಟ್ ನಲ್ಲಿ ಅಲ್ಪ ಪ್ರಮಾಣದ ಗೌರವ ಧನ ಹೆಚ್ಚಿಸಿರುವ ಸರ್ಕಾರದ ಕ್ರಮ ಸರಿಲ್ಲ. ಕನಿಷ್ಠ ವೇತನಕ್ಕೆ ಸಮಾನವಾಗಿ ಗೌರವ ಧನ ಹೆಚ್ಚಿಸಬೇಕು. ಗೌರವಧನ ಹೆಚ್ಚಳದ ಆರನೇ ಗ್ಯಾರಂಟಿ ಜಾರಿ ಗೊಳಿಸಬೇಕು. ಅಲ್ಲದೇ ಸೇವೆಗೆ ಸೇರಿ 2011 ರಿಂದ ನಿವೃತ್ತರಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ಜಾರಿಗೊಳಿಸಬೇಕೆಂದು ಎಂಬ ಒತ್ತಾಯ ಕೇಳಿ ಬಂತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಾವಿರಾರು ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ನಮ್ಮ ಅಳಲು ಆಲಿಸುವಂತೆ ಮನವಿ ಮಾಡಿದರು. ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕಳೆದ ಚುನಾವಣಾ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕ್ರಮವಾಗಿ ಮಾಸಿಕವಾಗಿ ರೂ.15,000 ಮತ್ತು ರೂ.10,000 ಗೌರವ ಧನ ಹೆಚ್ಚಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಪ್ರಸಕ್ತ ಬಜೆಟ್ ನಲ್ಲಿ ಒಂದು ಸಾವಿರ ಮತ್ತು 750 ರೂಪಾಯಿ ಮಾತ್ರವೇ ಹೆಚ್ಚಿಸಲಾಗಿದೆ. ಈ ಮೂಲಕ ಸರ್ಕಾರ ಕೊಟ್ಟ ಮಾತಿಗೆ ತಪ್ಪಿ ನಡೆದಿದೆ.
ಗ್ರಾಚ್ಯುಟಿ ಸೌಲಭ್ಯವನ್ನು 2011 ರಿಂದ ನಿವೃತ್ತರಾದ ಎಲ್ಲರಿಗೂ ನೀಡುವ ಬದಲು 2023 ರಿಂದ ಜಾರಿಗೆ ಬರುವಂತೆ ಪ್ರಾಯೋಗಿಕವಾಗಿ ಗ್ರಾಚ್ಯುಟಿ ನೀಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ಕ್ರಮವನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ ಅಂಗನವಾಡಿ ಸಂಘಟನೆಗಳು ನಿವೃತ್ತರೆಲ್ಲರಿಗೂ ಅನ್ವಯವಾಗುವಂತೆ ಜಾರಿಗೊಳಿಸಬೇಕು ಎಂದು ಅವರು ಪಟ್ಟು ಹಿಡಿದರು.

ಪ್ರತಿಭಟನಾಕಾರರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರ್ನಾಟಕ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸುತ್ತಿದ್ದ ಫ್ರೀಡಂ ಪಾರ್ಕಿಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಸಮಸ್ಯೆಗಳನ್ನು ಪರಿಹರಿಸಿ ಅವರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಈ ಬಗ್ಗೆ ಚರ್ಚಿಸಲು ಮತ್ತು 2011 ರಿಂದ ನಿವೃತ್ತರಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ನೀಡುವ ಕುರಿತಂತೆ ನಾಳೆ ಗುರುವಾರ ಮಾರ್ಚ್ 20ರಂದು ತಮ್ಮ ಅಧ್ಯಕ್ಷತೆಯಲ್ಲಿ ಅಂಗನವಾಡಿ ಸಂಘಟನೆಗಳ ನಾಯಕರುಗಳ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವುದು. ಈ ಪ್ರತಿಭಟನೆಯಲ್ಲಿ ಸಚಿವರಿಗೆ ಎಐಟಿಯುಸಿ ಅಂಗನವಾಡಿ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ರಾಜ್ಯಾಧ್ಯಕ್ಷ ಜಿ.ಆರ್ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಬಿ.ನಾಗರತ್ನಮ್ಮ, ಎಐಯುಟಿಯುಸಿ ನೇತೃತ್ವದ ಅಂಗನವಾಡಿ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ಮತ್ತು ಪ್ರಧಾನ ಕಾರ್ಯದರ್ಶಿ ಎಂ.ಉಮಾದೇವಿ ಅವರು ಮನವಿ ಪತ್ರ ಸಲ್ಲಿಸಿದರು.