ತುಮಕೂರು: ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ, ಶಾಸಕ ಕೆಎನ್ ರಾಜಣ್ಣ,ತುಮಕೂರು ಜಿಲ್ಲೆಯ ರಾಜಕಾರಣ ಮತ್ತು ಕಾಂಗ್ರೆಸ್ ಪಕ್ಷದ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. 2004ರಲ್ಲಿ ತಾವು ದೊಡ್ಡೇರಿ ಹೋಬಳಿಯಿಂದ ಶಾಸಕರಾಗಿದ್ದ ಸಂದರ್ಭವನ್ನು ನೆನಪಿಸಿಕೊಂಡ ರಾಜಣ್ಣ, ಆಗ ಕಾಂಗ್ರೆಸ್ ಪಕ್ಷದಲ್ಲಿ ಸರಿಯಾದ ಗೌರವ ಸಿಗದ ಕಾರಣ ಜನತಾದಳಕ್ಕೆ ಸೇರಿ ಸ್ಪರ್ಧಿಸಿದ್ದೆ. ಆಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವೈಟ್ವಾಶ್ ಆಗಿತ್ತು ಎಂದ ಅವರು, ಇದೇ ಪರಿಸ್ಥಿತಿ ಈಗ ಮತ್ತೆ ಬರುತ್ತದೆಯೋ ಏನೋ ಗೊತ್ತಿಲ್ಲ ಎಂದು ಅಭಿಪ್ರಾಯಪಟ್ಟರು.
ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದರಿಂದ ಹಿಂದೆ ಆದಂಥ ಪರಿಸ್ಥಿತಿ ಮತ್ತೆ ಬರುವುದಿಲ್ಲ. ಆದರೆ ಪರಿಸ್ಥಿತಿ ಏನಾಗುತ್ತದೆ ಎಂದು ಹೇಳಲಾಗದು ಎಂದು ನಗುತ್ತಾ ಹೇಳಿದರು. ಮುಂದುವರಿದು ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಮಿತ್ರರೂ ಅಲ್ಲ ಎಂದರು. ಮುಂದಿನ ತೀರ್ಮಾನಗಳನ್ನು ಜನರು ಮಾಡಬೇಕು, ತಾವು ಚುನಾವಣೆಗೆ ನಿಲ್ಲದಿರುವುದರಿಂದ ತಮಗೆ ಪ್ರಶ್ನೆ ಇಲ್ಲ ಎಂದರು.
ಬಡವರ ಪರವಾಗಿ ಕೆಲಸ ಮಾಡುವ ಮಹತ್ವವನ್ನು ರಾಜಣ್ಣ ಒತ್ತಿ ಹೇಳಿದರು. ಜಾತಿ ರಹಿತವಾಗಿ, ಪಕ್ಷ ರಹಿತವಾಗಿ ಎಲ್ಲ ಬಡವರ ಪರ ಕೆಲಸ ಮಾಡಿದಾಗ ಅವರ ಆಶೀರ್ವಾದವೇ ದೇವರ ಆಶೀರ್ವಾದ ಮತ್ತು ಅವರ ಬೆಂಬಲವೇ ಆನೆ ಬಲ ಎಂದು ತಿಳಿಸಿದರು. ಜನರ ನಂಬಿಕೆ ಮತ್ತು ಆಶೀರ್ವಾದದಿಂದ ಮಾತ್ರ ರಾಜಕಾರಣದಲ್ಲಿ ಬೆಳೆಯಲು ಸಾಧ್ಯ ಎಂದು ಅವರು ಹೇಳಿದರು.
For More Updates Join our WhatsApp Group :




