ಬೆಂಗಳೂರು : ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ 35ನೇ ಸಿಸಿಹೆಚ್ ಆಗಸ್ಟ್ 28ರ ವರೆಗೆ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿದೆ. ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರ ಮನವಿ ಮಾಡಿದರು.
ಆಗ ಇಡಿ ಪರ ವಕೀಲರು, ತನಿಖೆ ಅಗತ್ಯ ಇದೆ. ಕೋಟ್ಯಾಂತರ ರೂ. ನಗದು ಕೆಜಿ ಗಟ್ಟಲೇ ಚಿನ್ನ ಪತ್ತೆಯಾಗಿದೆ. ವಿದೇಶದಲ್ಲಿ ವ್ಯವಹಾರ ನಡೆಸಿದ್ದಾರೆ. ಕಸಿನೋಗಳು, ಆನ್ಲೈನ್ ಬೆಟ್ಟಿಂಗ್ ಸೈಟ್ಗಳ ವ್ಯವಹಾರ ನಡೆದಿದೆ. ಕೋಟ್ಯಾಂತರ ರೂ. ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ವಿಚಾರಣೆ ನಡೆಸಲು ಅವಶ್ಯಕತೆ ಇದೆ ಎಂದು ಇಡಿ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರು, ಆಗಸ್ಟ್ 28ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.
ಕೆಸಿ ವೀರೇಂದ್ರ ವಿರುದ್ಧ ಕೇಳಿಬಂದಿರುವ ಆರೋಪವೇನು?
ಕೆಸಿ ವಿರೇಂದ್ರ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ಗಳಿಗೆ ಅಕ್ರಮ ಹಣ ವರ್ಗಾವಣೆ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ (ಆ.22) ದಂದು ಶಾಸಕ ಕೆ.ಸಿ.ವೀರೇಂದ್ರ ಹಾಗೂ ಅವರ ಸಹೋದರರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಚಿತ್ರದುರ್ಗ, ಚಳ್ಳಕೆರೆ, ಬೆಂಗಳೂರು, ಗೋವಾ ಸೇರಿದಂತೆ 30 ಕಡೆಗಳಲ್ಲಿ ದಾಳಿ ಮಾಡಿದರು. ಶಾಸಕ ಕೆ.ಸಿ.ವೀರೇಂದ್ರ ಮನೆಗಳು, ಕಂಪನಿಗಳು ಮತ್ತು ಇತರರ ಮನೆ, ಕಚೇರಿಗಳು ಸೇರಿ 30 ಕಡೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದರು. ಕೆಸಿ ವೀರೇಂದ್ರ ಅವರನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದರು.
ಬೆಂಗಳೂರು ವಿಭಾಗದ ಇಡಿ ಅಧಿಕಾರಿಗಳ ತಂಡ ಚಿತ್ರದುರ್ಗ ಜಿಲ್ಲೆಯ 6 ಕಡೆ, ಬೆಂಗಳೂರು ನಗರದ 10, ಹುಬ್ಬಳ್ಳಿಯ 1 ಕಡೆ, ರಾಜಸ್ಥಾನದ ಜೋಧ್ಪುರದ 3 ಕಡೆ, ಮುಂಬೈನ 2 ಕಡೆ, ಗೋವಾದ 5 ಕ್ಯಾಸಿನೋ ಸೇರಿ ಹಲವೆಡೆ ದಾಳಿ ಮಾಡಿದ್ದರು.
ಆನ್ಲೈನ್ ಬೆಟ್ಟಿಂಗ್ ತಾಣಗಳಾದ ಕಿಂಗ್567, ರಾಜಾ567, ಪಪ್ಪಿಸ್003, ರತ್ನ ಗೇಮಿಂಗ್, ಶಾಸಕ ಕೆ.ಸಿ.ವೀರೇಂದ್ರ ಸಹೋದರ ಕೆ.ಸಿ.ತಿಪ್ಪೇಸ್ವಾಮಿಗೆ ಸೇರಿದ ದುಬೈನಲ್ಲಿರುವ ವ್ಯವಹಾರಗಳ ಕಚೇರಿಗಳಾದ ಡೈಮಂಡ್ ಸಾಫ್ಟೆಕ್, ಟಿಆರ್ಎಸ್ ಟೆಕ್ನಾಲಜಿಸ್, ಪ್ರೈಮ್9 ಟೆಕ್ನಾಲಜಿಸ್, ಕಾಲ್ ಸೆಂಟರ್ ಸರ್ವೀಸ್ ಮೇಲೆ ದಾಳಿ ನಡೆಸಿ, ಗೇಮಿಂಗ್ ಬ್ಯುಸಿನೆಸ್ಗೆ ಸಂಬಂಧಿಸಿದ ದಾಖಲೆ ಪರಿಶೀಲಿಸಿದ್ದರು.
For More Updates Join our WhatsApp Group :