ಬೆಂಗಳೂರು : ಬೆಂಗಳೂರಿನ ಹೃದಯಭಾಗದಲ್ಲಿರುವ ಕಬ್ಬನ್ ಪಾರ್ಕ್ನಲ್ಲಿ ಹಸಿರುವ ಹೆಚ್ಚಿಸುವುದು ಮತ್ತು ಒಟ್ಟಾರೆ ಪುನಶ್ಚೇತನಕ್ಕೆ 5 ಕೋಟಿ ರೂ. ಅನುದಾನ ನೀಡುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾನ ನೀಡಿದ್ದಾರೆ. ಭಾನುವಾರ ಕಬ್ಬನ್ ಪಾರ್ಕ್ಗೆ ತೆರಳಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಅವರು, ಕಬ್ಬನ್ ಪಾರ್ಕ್ ಮತ್ತು ಲಾಲ್ಬಾಗ್ ಅನ್ನು ‘ಬೆಂಗಳೂರಿನ ಅವಳಿ ಶ್ವಾಸಕೋಶಗಳು’ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ನೀಡಲಾಗುವುದು ಎಂದಿದ್ದಾರೆ.
ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಯಾವುದೇ ಹೊಸ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಡಿಕೆಶಿ ಭರವಸೆ ನೀಡಿದ್ದಾರೆ. ಕಬ್ಬನ್ ಪಾರ್ಕ್ ಬಗ್ಗೆ ಜನರು ಹೆಚ್ಚಿನ ಕಾಳಜಿ ವಹಿಸಬೇಕು. ಅಧಿಕಾರಿಗಳು ಈ ಸ್ಥಳವನ್ನು ಸಂರಕ್ಷಿಸಲು ಬಿಡಿಎ ಮತ್ತು ತೋಟಗಾರಿಕೆ ಇಲಾಖೆ ಹಣವನ್ನು ಒದಗಿಸಲು ಸಿದ್ಧವಾಗಿದೆ ಎಂದು ಶಿವಕುಮಾರ್ ಹೇಳಿದ್ದರೆ.
ಉದ್ಯಾನವನದ ನೈಸರ್ಗಿಕ ಮೋಡಿಗೆ ಧಕ್ಕೆಯಾಗದಂತೆ ಅಭಿವೃದ್ಧಿ ಮಾಡಲಾಗುವುದು. ಕಬ್ಬನ್ ಪಾರ್ಕ್ ಅನ್ನು ಸಮುದಾಯ ಸ್ಥಳವನ್ನಾಗಿ ಮಾಡುವ ಆಶಯದೊಂದಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಓಪನ್ ಗ್ರೌಂಡ್ ಕಾರ್ಯಕ್ರಮಗಳನ್ನು ಪರಿಚಯಿಸುವ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದ್ದಾರೆ. ಇದೇ ವೇಳೆ, ವಿದ್ಯಾರ್ಥಿ ನಾಯಕನಾಗಿ ಉದ್ಯಾನವನಕ್ಕೆ ಹೋಗುತ್ತಿದ್ದುದನ್ನು ಮತ್ತು ಮದುವೆಯಾದ ಆರಂಭದಲ್ಲಿ ಪತ್ನಿಯನ್ನು ಕರೆದುಕೊಂಡು ಬಂದಿದ್ದನ್ನೂ ಅವರು ಮೆಲುಕು ಹಾಕಿದ್ದಾರೆ.
ಕಬ್ಬನ್ ಪಾರ್ಕ್ ಮಾತ್ರವಲ್ಲದೆ, ಬೆಂಗಳೂರಿನ ಹಸಿರು ಪ್ರದೇಶಗಳನ್ನು ವಿಸ್ತರಣೆ ಮಾಡಲು ನಗರದ ಇತರ ಭಾಗಗಳಲ್ಲಿ ಕಬ್ಬನ್ ಪಾರ್ಕ್ ಮತ್ತು ಲಾಲ್ಬಾಗ್ ಮಾದರಿಯಲ್ಲಿ ಟ್ರೀ ಪಾರ್ಕ್ಗಳನ್ನು ರಚಿಸುವ ದೂರದೃಷ್ಟಿಯ ಯೋಜನೆಯ ಬಗ್ಗೆ ಶಿವಕುಮಾರ್ ವಿವರಣೆ ನೀಡಿದ್ದಾರೆ. ಈ ಯೋಜನೆಗಳಿಗಾಗಿ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂಬುದನ್ನು ಅವರು ಒತ್ತಿ ಹೇಳಿದ್ದಾರೆ.
For More Updates Join our WhatsApp Group :




