ಧಾರವಾಡ: ಇತ್ತೀಚೆಗೆ ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ ಅವಮಾನಕ್ಕೀಡಾದ ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ ಎರಡು ಪುಟಗಳ ಪತ್ರ ಬರೆದಿದಿದ್ದಾರೆ. ಆದರೆ, ಇದರಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆ ಇರುವುದರಿಂದ ಹಿರಿಯ ಅಧಿಕಾರಿಗಳು ನಾರಾಯಣ ಭರಮನಿ ಅವರ ಮನವೊಲಿಕೆ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹೌದು…ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾಗಿದ್ದ ಧಾರವಾಡದ ಎಎಸ್ಪಿ ನಾರಾಯಣ.ವಿ.ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿದ್ದು, ಈ ಸಂಬಂಧ ಈಗಾಗಲೇ ರಾಜೀನಾಮೆ ಪತ್ರ ಸಹ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಪತ್ರದಲ್ಲಿ ತಮಗಾದ ಅವಮಾನದ ಬಗ್ಗೆ ಹೇಳಿಕೊಂಡಿದ್ದಾರೆ. ಆದ್ರೆ, ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ನಾರಾಯಣ ಭರಮನಿ ಮನವೊಲಿಕೆಗೆ ಕಸರತ್ತು ನಡೆಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆ ಹಿನ್ನೆಲೆ ಮನವೊಲಿಕೆ ಯತ್ನ ನಡೆದಿದೆ ಎನ್ನಲಾಗಿದೆ.
ಇನ್ನು ಎಎಸ್ಪಿ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿರುವ ಬ್ಗಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಸಿಎಂ ಬಹಿರಂಗವಾಗಿ ಅಧಿಕಾರಿ ಜತೆ ಈ ರೀತಿ ನಡೆದುಕೊಂಡಿದ್ದಾರೆ. ಇನ್ನೂ ಆಂತರಿಕವಾಗಿ ಅವರು ಯಾವ ರೀತಿ ನಡೆದುಕೊಳ್ಳಬಹುದು? ಎಂದು ಕಿಡಿಕಾರಿದರು.
ಅಂದು ಬೆಳಗಾವಿಯಲ್ಲಿ ಆಗಿದ್ದೇನು?
ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಭೆ ವೇಳೆ ಸಿಎಂ ಭಾಷಣ ಮಾಡುತ್ತಿರುವಾಗಲೇ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಾಡಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಸಿದ್ದರಾಮಯ್ಯ, “ಏಯ್.. ಯಾರಿಲ್ಲಿ ಎಸ್ಪಿ?” ಬಾರಯ್ಯ ಇಲ್ಲಿ ಎಂದು ವೇದಿ ಮೇಲೆ ಕರೆದು ನಾರಾಯಣ ಭರಮನಿ ಅವರ ಮೇಲೆ ಕೈ ಎತ್ತಿದ್ದರು. ಸಿದ್ದರಾಮಯ್ಯ ಅವರ ಈ ವರ್ತನೆಗೆ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯನವರ ವರ್ತನೆಗೆ ಸಾಕಷ್ಟು ಟೀಕೆ ಟಿಪ್ಪಣಿಗಳು ವ್ಯಕ್ತವಾಗಿದ್ದವು. ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಯನ್ನು ಅವಮಾನಿಸುವುದು, ಅವಹೇಳನ ಮಾಡುವುದು ಸರಿಯಲ್ಲ ಟೀಕಿಸಿದ್ದರು.