ಬೆಂಗಳೂರು: ಇಂಜಿನಿಯರಿಂಗ್ ಸೀಟ್ ಹಂಚಿಕೆ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದಾರೆ.
ಬೆಂಗಳೂರು ಸೇರಿದಂತೆ 18 ಕಡೆಗಳಲ್ಲಿ ಇಂಜಿನಿಯರಿಂಗ್ ಕಾಲೇಜುಗಳು, ಕಾಲೇಜು ಆಡಳಿತ ಮಂಡಳಿ ಸದಸ್ಯರ ಮನೆಗಳಲ್ಲಿ ಪರಿಶೀಲನೆ ನಡೆಯುತ್ತಿದೆ.

ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ಗಳಲ್ಲಿ ಸೀಟ್ಗಳನ್ನು ಬ್ಲಾಕ್ ಮಾಡಿ ಅಕ್ರಮವಾಗಿ ಹಂಚಿಕೆ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಕಳೆದ ವರ್ಷ ಮಲ್ಲೇಶ್ವರಂನ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕಿಂಗ್ ಪಿನ್ ಸೇರಿದಂತೆ 10ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದರು.
ಏನಿದು ಹಗರಣ?: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ನೌಕರನ ಸಹಾಯದಿಂದ ಪಡೆದ ಪಾಸ್ವರ್ಡ್ ಬಳಸಿ, ಸರ್ಕಾರಿ ಸೀಟ್ ಪಡೆದು ಕಾಲೇಜ್ ಆಯ್ಕೆ ಮಾಡಿಕೊಳ್ಳದ ವಿದ್ಯಾರ್ಥಿಗಳ ಸೀಟ್ಗಳನ್ನು ಆರೋಪಿಗಳು ಬ್ಲಾಕ್ ಮಾಡುತ್ತಿದ್ದರು. ಆ ಸೀಟ್ಗಳನ್ನು ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ಮೆಂಟ್ ಕೋಟಾದಡಿ ಬೇರೆಯವರಿಗೆ ಡೀಲ್ ಮಾಡುತ್ತಿದ್ದರು.
ಕಾಲೇಜಿನ ಮ್ಯಾನೇಜ್ಮೆಂಟ್ ಹಾಗೂ ಮಧ್ಯವರ್ತಿಗಳ ಸಹಾಯದಿಂದಲೇ ಈ ಡೀಲ್ ನಡೆಯುತ್ತಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕೌನ್ಸೆಲಿಂಗ್ಗೆ ಹಾಜರಾಗಿ ಕಾಲೇಜ್ ಆಯ್ಕೆಯಾಗದೇ ಇರುವವರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗುತ್ತಿದ್ದರು ಎಂದು ಪೊಲೀಸರ ತನಿಖೆಯಲ್ಲಿ ಬಯಲಾಗಿತ್ತು.
ಡೀಲ್ನಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾದ ಶಂಕೆಯಿರುವ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಪ್ರತ್ಯೇಕವಾಗಿ ತನಿಖೆ ಆರಂಭಿಸಿದ್ದರು.