ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಕ್ಲು ಶಿವ ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಜಗದೀಶ್, ವಿಮಲ್, ಕಿರಣ್, ಅನಿಲ್, ಭೈರತಿ ಬಸವರಾಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೊಲೆಗೆ ಭೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.

ದೇವರ ಸಾಕ್ಷಿಯಾಗಿ ನನಗೆ ಗೊತ್ತಿಲ್ಲ ಎಂದ ಭೈರತಿ ಬಸವರಾಜ್
ಈ ಬಗ್ಗೆ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಹೇಳಿಕೆ ನೀಡಿದ್ದು, ಬಿಕ್ಲು ಶಿವ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಕೊಲೆಯಾದವನ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ದೂರು ಕೊಟ್ಟ ತಕ್ಷಣ ಏಕಾಏಕಿ ನನ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಈ ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಯಾರೇ ದೂರು ಕೊಟ್ಟರೂ ಎಫ್ಐಆರ್ ದಾಖಲಿಸಬಹುದಾ? FIR ದಾಖಲಿಸುವುದಕ್ಕೂ ಮುನ್ನ ನನ್ನಿಂದ ಮಾಹಿತಿ ಪಡೆದಿದ್ದಾರಾ? ಈ ವಿಚಾರದಲ್ಲಿ ನನ್ನ ಹೆಸರು ತಂದಿದ್ದಕ್ಕೆ ತುಂಬಾ ಬೇಸರವಾಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇರಬಹುದು. ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದು ಹೇಳಿದ್ದಾರೆ.
ಈ ಕುರಿತು ಬಿಕ್ಲು ಶಿವ ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಶಾಸಕ ಭೈರತಿ ಬಸವರಾಜ್, ಜಗದೀಶ್ ಅಲಿಯಾಸ್ ಜಗ್ಗ ಹಾಗೂ ಕಿರಣ್ ಸಹಚರರ ವಿರುದ್ಧ ದೂರು ನೀಡಿದ್ದ. ಭಾರತಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು. ಪೊಲೀಸ್ ಆಯುಕ್ತರಿಗೆ ದೂರು ನೀಡಿ 4 ತಿಂಗಳಲ್ಲೇ ಬಿಕ್ಲು ಶಿವ ಕೊಲೆ ಆಗಿದೆ. ಅದೇ ಗ್ಯಾಂಗ್ನಿಂದ ಕೊಲೆಯಾಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.