ಬಾಗಲಕೋಟೆ: ಕೋಲ್ಕತ್ತಾ ಕಾಲೇಜು ಹಾಸ್ಟೆಲ್ನಲ್ಲಿ ಯುವತಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಎ1 ಆರೋಪಿಯಾಗಿರುವ ಬಾಗಲಕೋಟೆ ಮೂಲದ ಯುವಕ ಪರಮಾನಂದ ಜೈನ್ ಬಂಧನವಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ನಿವಾಸಿಯಾಗಿರುವ ಪರಮಾನಂದ ಜೈನ್ನನ್ನು ಜುಲೈ 12 ರಂದೇ ಪೊಲೀಸರು ಬಂಧಿಸಿ ಕರೆದೊಯ್ದಿರುವುದು ಗೊತ್ತಾಗಿದೆ. ಕೋಲ್ಕತ್ತಾದ ಐಐಎಂ ಕಾನೂನು ಕಾಲೇಜಿನಲ್ಲಿ ಓದುತ್ತಿರುವ ಪರಮಾನಂದ, ಅದೇ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪವಿದೆ. ವಿದ್ಯಾರ್ಥಿನಿಯನ್ನು ಹಾಸ್ಟೆಲ್ಗೆ ಕರೆಸಿಕೊಂಡು ಮತ್ತು ಬರುವ ಪಾನೀಯ ಕುಡಿಸಿ ಅತ್ಯಾಚಾರವೆಸಗಿರುವ ಆರೋಪವಿದೆ. ಇದೀಗ ಪರಮಾನಂದ ಜೈನ್ ತಂದೆ, ತಾಯಿ ಕೋಲ್ಕತ್ತಾಗೆ ತೆರಳಿದ್ದಾರೆ.

ಏನಿದು ಪ್ರಕರಣ?
ಕೋಲ್ಕತ್ತಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಕ್ಯಾಂಪಸ್ನ ಹುಡುಗರ ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯೊಬ್ಬ ಮಾದಕ ದ್ರವ್ಯ ಬೆರೆಸಿದ ಪಾನೀಯ ಕುಡಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿಯೊಬ್ಬಳು ಇತ್ತೀಚೆಗೆ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಳು. ಕೌನ್ಸೆಲಿಂಗ್ ನೆಪದಲ್ಲಿ ಹುಡುಗರ ಹಾಸ್ಟೆಲ್ಗೆ ಕರೆಸಿ ಕೃತ್ಯ ಎಸಗಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಳು.

ವಿದ್ಯಾರ್ಥಿಯೊಬ್ಬರು ಅಪರಾಧ ಕೃತ್ಯವೊಂದರಲ್ಲಿ ಶಾಮೀಲಾಗಿರುವ ಗಂಭೀರ ದೂರಿನ ಬಗ್ಗೆ ತಿಳಿದಿದೆ. ಆದರೆ, ದೂರುದಾರರು ಸಂಸ್ಥೆಯವರಲ್ಲ ಎಂದು ಐಐಎಂ ಆಡಳಿತ ನಂತರ ಸ್ಪಷ್ಟಪಡಿಸಿತ್ತು. ನಾವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ ಮತ್ತು ಪ್ರಸ್ತುತ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ ಎಂದು ಆಡಳಿತ ಮಂಡಳಿ ತಿಳಿಸಿತ್ತು.




