ಕ್ಯೂನಲ್ಲಿ ನಿಲ್ಲಲಾಗದೆಂದ ಕಾಶಪ್ಪನವರ್ಗೆ ತೇಜಸ್ವಿ ಸೂರ್ಯ ಟಾಂಗ್!
ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಕ್ರೇಜ್ ಆರಂಭವಾಗುತ್ತಿದ್ದಂತೆಯೇ, ಇತ್ತ ವಿಧಾನಸೌಧದ ಒಳಗೂ ಟಿಕೆಟ್ ಕಿರಿಕ್ ಶುರುವಾಗಿದೆ. ‘ನಾವು ವಿಐಪಿಗಳು, ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಟಿಕೆಟ್ ಪಡೆಯಲು ಸಾಧ್ಯವಿಲ್ಲ. ಪ್ರತಿ ಶಾಸಕರಿಗೂ 5 ವಿಐಪಿ ಟಿಕೆಟ್ ನೀಡಬೇಕು’ ಎಂಬ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಹೇಳಿಕೆ ಈಗ ರಾಜ್ಯಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ.
ವಿಜಯಾನಂದ ಕಾಶಪ್ಪನವರ್ ಹೇಳಿದ್ದೇನು?
ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ವಿಧಾನಸಭೆಯಲ್ಲಿ ಕೆಎಸ್ಸಿಎ (KSCA) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಾವು ಜನಪ್ರತಿನಿಧಿಗಳು, ನಮಗೆ ಗೌರವ ಕೊಡಬೇಕು. ಕಳೆದ ಬಾರಿ ನಮ್ಮನ್ನು ಸಾಮಾನ್ಯ ಗ್ಯಾಲರಿಯಲ್ಲಿ ಕೂರಿಸಲಾಗಿತ್ತು. ಕೆಎಸ್ಸಿಎ ಸರ್ಕಾರದಿಂದ ಭದ್ರತೆ ಸೇರಿದಂತೆ ಎಲ್ಲಾ ಸೌಲಭ್ಯ ಪಡೆಯುತ್ತದೆ, ಆದರೆ ಶಾಸಕರಿಗೆ ಟಿಕೆಟ್ ನೀಡಲು ಹಿಂದೇಟು ಹಾಕುತ್ತಿದೆ. ಆನ್ಲೈನ್ನಲ್ಲಿ ಟಿಕೆಟ್ ಪಡೆಯುವುದು ಒಂದು ನಾಟಕ, ಅಲ್ಲಿ ಬ್ಲಾಕ್ ಮಾರ್ಕೆಟ್ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಕಾಶಪ್ಪನವರ್ ಬೇಡಿಕೆಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸಹ ದನಿಗೂಡಿಸಿದ್ದಾರೆ.
ಐಪಿಎಲ್ ಟಿಕೆಟ್ ಬೇಡಿಕೆಗೆ ಡಿಕೆಶಿ ಶಿವಕುಮಾರ್ ಬೆಂಬಲ
ಆದರೆ, ಈ ವಿಚಾರದಲ್ಲಿ ಶಾಸಕರ ಬೆಂಬಲಕ್ಕೆ ನಿಂತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಶಾಸಕರು ಸರ್ಕಾರದ ವ್ಯವಸ್ಥೆಯ ಒಂದು ಭಾಗ. ಅವರಿಗೆ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ನಾನು ಈ ಬಗ್ಗೆ ಕೆಎಸ್ಸಿಎ ಪದಾಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ತೇಜಸ್ವಿ ಸೂರ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿ, ಸೂರ್ಯ ಮೊದಲು ಅವರ ಪಕ್ಷದ ಶಾಸಕರಿಗೆ ಬುದ್ಧಿ ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.
ಈ ಬೆಳವಣಿಗೆಯ ಬೆನ್ನಲ್ಲೇ, ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ನೀಡುವ ನಿಟ್ಟಿನಲ್ಲಿ ಕೆಎಸ್ಸಿಎಗೆ ಸೂಚನೆ ನೀಡಿ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
For More Updates Join our WhatsApp Group :




