ಪೌರಾಯುಕ್ತೆ ನಿಂದನೆ ಪ್ರಕರಣ.
ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ಪೌರಾಯುಕ್ತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಕರ್ನಾಟಕ ಹೈಕೋರ್ಟ್ ಕೂಡ ಛೀಮಾರಿ ಹಾಕಿದೆ. ಇದರಿಂದ, ಪರೋಕ್ಷವಾಗಿ ಸರ್ಕಾರಕ್ಕೂ ಮುಖಭಂಗವಾಗಿದೆ. ಇಷ್ಟೆಲ್ಲಾ ಆದರೂ ರಾಜೀವ್ ಗೌಡ ಬಂಧನವಾಗಿಲ್ಲ. ಪ್ರಭಾವಿ ಸಚಿವರೊಬ್ಬರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದಾರೆಯೇ ಎಂಬ ಅನುಮಾನ ಇದೀಗ ಬಲವಾಗಿದೆ. ಹಿರಿಯ ಮಂತ್ರಿಯೊಬ್ಬರು ರಾಜೀವ್ ಗೌಡ ಪತ್ನಿ ಸಹನಾ ಜೊತೆ ದೂರವಾಣಿ ಸಂಪರ್ಕದಲ್ಲಿದ್ದಾರೆ. ಅವರೇ ಬಂಧನದಿಂದ ತಪ್ಪಿಸಿಕೊಳ್ಳಲು ಬೇಕಾದ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂಬ ವಿಚಾರ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಪ್ರಭಾವಿ ಸಚಿವರ ಕಾರಣ ಪೊಲೀಸರು ಅಸಹಾಯಕರಾಗಿದ್ದಾರೆ. ಇದರಿಂದಾಗಿ ರಾಜೀವ್ ಗೌಡ ಬಂಧನ ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಪೊಲೀಸರು ಶೋಧ ನಡೆಸಿದ್ದರು ಇನ್ನೂ ರಾಜೀವ್ ಗೌಡ ಬಂಧನ ವಾಗದಿರುವುದು, ಪ್ರಭಾವಿ ಸಚಿವರ ಹಸ್ತಕ್ಷೇಪದ ಕುರಿತ ಅನುಮಾನಗಳಿಗೆ ಪುಷ್ಟಿ ನೀಡಿದೆ.
ಶಿಡ್ಲಘಟ್ಟ ಪೊಲೀಸರಿಂದ ನಾಲ್ಕು ನೋಟಿಸ್ ಜಾರಿ
ಪೌರಾಯುಕ್ತೆಗೆ ನಿಂದಿಸಿರುವ ಪ್ರಕರಣದಲ್ಲಿ ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ಪೊಲೀಸರು ನಾಲ್ಕು ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ಮನೆಗಳಿಗೆ ಬೀಗ ಜಡಿದು ರಾಜೀವ್ ಗೌಡ ತಲೆಮೆರೆಸಿಕೊಂಡಿದ್ದಾರೆ. ಅವರ ಪತ್ನಿ ಸಹನಾ ಕೂಡ ಮನೆಯಲ್ಲಿ ಇಲ್ಲವೆಂಬ ಮಾಹಿತಿ ಲಭ್ಯವಾಗಿದೆ.
ಮತ್ತೊಂದೆಡೆ ರಾಜೀವ್ ಗೌಡ ವಿಚಾರ ಚಿಕ್ಕಬಳ್ಳಾಪುರ, ಕೋಲಾರ ವ್ಯಾಪ್ತಿಯಲ್ಲಿ ಕಾಂಗ್ರೆಸ್ನ ಎರಡು ಬಣಗಳ ನಡುವೆ ಮುಸುಕಿನ ಗುದ್ದಾಟಕ್ಕೆ ಕಾರಣವಾಯಿತೇ ಎಂಬ ಪ್ರಶ್ನೆಯೂ ಮೂಡಿದೆ. ಒಬ್ಬರು ಪ್ರಭಾವಿ ಸಚಿವರು ರಾಜೀವ್ ಗೌಡ ರಕ್ಷಣೆಗೆ ನಿಂತಿದ್ದರೆ, ಮತ್ತೊಬ್ಬರು ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
For More Updates Join our WhatsApp Group :




