ಕನ್ನಡ ತಮಿಳಿನಿಂದ ಹುಟ್ಟಿದೆ : Kamal Haasan ಹೇಳಿಕೆಗೆ ಆಕ್ರೋಶ

ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್ಗೆ High Court ಚಾಟಿ

ಬೆಂಗಳೂರು: ಕನ್ನಡ ಭಾಷೆಯ ಮೂಲದ ಕುರಿತು ತಮಿಳಿನ ಜನಪ್ರಿಯ ನಟ ಕಮಲ್ ಹಾಸನ್ ಅವರ ಹೇಳಿಕೆ ಕರ್ನಾಟಕದಲ್ಲಿ ವಿವಾದ ಸೃಷ್ಟಿಸಿದ್ದು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜೊತೆಗೆ, ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

‘ಕನ್ನಡಕ್ಕೆ ತಮಿಳು ಜನ್ಮ ನೀಡಿದೆ’ ಎಂಬುದು ಖ್ಯಾತ ನಟ ಕೊಟ್ಟಿರುವ ಹೇಳಿಕೆಯಾಗಿದೆ. ಇದು ವಿವಾದ ಸೃಷ್ಟಿಸಿದ್ದು, ಬಹುತೇಕ ಕನ್ನಡಿಗರು ಸೋಷಿಯಲ್ ಮೀಡಿಯಾ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಚೆನ್ನೈನಲ್ಲಿ ನಡೆದ ತಮ್ಮ ‘ಥಗ್ ಲೈಫ್’ ಪ್ರಮೋಶನ್ ಈವೆಂಟ್ನಲ್ಲಿ ಕನ್ನಡ ಭಾಷೆ ತಮಿಳು ಭಾಷೆಯಿಂದ ಬಂದಿದೆ ಎಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿವೆ.

ವಿಜಯೇಂದ್ರ ಪೋಸ್ಟ್: ”ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಾಭಿಮಾನ ಮೆರೆಯುವುದು ಸಂಸ್ಕೃತಿಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು. ಕನ್ನಡವೂ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ ಶಿವರಾಜ್ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ”.

”ಭಾರತವೂ ಸೇರಿದಂತೆ ವಿಶ್ವದ ಹತ್ತು-ಹಲವು ಕಡೆಗಳಲ್ಲಿ ಕನ್ನಡದ ಹೆಗ್ಗುರುತು ಶತಾಶತಮಾನಗಳಿಂದಲೂ ಪಡಿಮೂಡಿದೆ. ಜಗತ್ತಿನ ಭಾಷೆಗಳಲ್ಲಿ ಕನ್ನಡಕ್ಕೆ ಸರ್ವ ಶ್ರೇಷ್ಠ ಮಾನ್ಯತೆ ಇದೆ ಎಂಬ ಕನಿಷ್ಠ ತಿಳುವಳಿಕೆ ಕಮಲ್ ಹಾಸನ್ ಅವರಂತಹ ಸಂಕುಚಿತ ವ್ಯಕ್ತಿತ್ವವಿರುವ ದುರಾಭಿಮಾನಿ ವ್ಯಕ್ತಿಗಳಿಗೆ ತಿಳಿದಿರಲಿ. ಕನ್ನಡವನ್ನು ಅವಹೇಳನ ಮಾಡುವ ಮುನ್ನ ಕನ್ನಡ ಚಿತ್ರಗಳಲ್ಲೂ ನಟಿಸಿರುವ ಕಮಲ್ ಹಾಸನ್ ಕನ್ನಡ, ಕನ್ನಡಿಗರ ಋಣ ತಮ್ಮ ಮೇಲಿದೆ ಎಂಬ ಔದಾರ್ಯತೆಯನ್ನು ಮರೆತಿದ್ದು, ಅವರ ಉಪಕಾರ ಸ್ಮರಣೆಯಿಲ್ಲದ ವ್ಯಕ್ತಿತ್ವವನ್ನು ಅನಾವರಣಗೊಳಿಸಿದೆ”.

‘ದಕ್ಷಿಣ ಭಾರತದಲ್ಲಿ ಸಾಮರಸ್ಯತೆಯನ್ನು ಬೆಸೆಯಬೇಕಾದ ಕಮಲ್ ಹಾಸನ್ ಅವರು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದರು. ಇದೀಗ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಕೊಳ್ಳಿಯಿಟ್ಟು ಕನ್ನಡವನ್ನು ಅಪಮಾನಿಸಿದ್ದಾರೆ. ಕಮಲ್ ಹಾಸನ್ ಅವರು ಈ ಕೂಡಲೇ ಕನ್ನಡಿಗರಲ್ಲಿ ಬೇಷರತ್ ಕ್ಷಮೆ ಕೇಳಬೇಕು”.

”ಯಾವ ಭಾಷೆಯಿಂದ ಯಾವ ಭಾಷೆ ಹುಟ್ಟಿತು ಎಂಬುದನ್ನು ವ್ಯಾಖ್ಯಾನಿಸಲು ಕಮಲ್ ಹಾಸನ್ ಇತಿಹಾಸ ತಜ್ಞರೇನೂ ಅಲ್ಲ. ಆದರೆ ಎರಡೂವರೆ ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಇರುವ ಕನ್ನಡ ಭಾಷೆ ಭಾರತದ ಭೂಪಟದಲ್ಲಿ ಸಮೃದ್ಧತೆಯನ್ನು ಸಂಕೇತಿಸುತ್ತದೆ, ಸೌಹಾರ್ದತೆಯನ್ನು ಪ್ರತಿನಿಧಿಸುತ್ತಿದೆ. ಕನ್ನಡಿಗರು ಭಾಷಾ ದ್ವೇಷಿಗಳಲ್ಲ, ಆದರೆ ಕನ್ನಡ ನಾಡು, ನುಡಿ, ಜನ, ಜಲ, ವಿಚಾರಗಳು ಬಂದಾಗ ಸ್ವಾಭಿಮಾನವನ್ನು ಎಂದಿಗೂ ಬಲಿ ಕೊಟ್ಟಿಲ್ಲ ಎಂಬ ಸತ್ಯ ವಿವೇಕ ಸುಟ್ಟುಕೊಂಡವರಂತೆ ಮಾತನಾಡಿರುವ ಕಮಲ್ ಹಾಸನ್ ಅವರಿಗೆ ನೆನಪಿರಲಿ” ಎಂದು ಬಿಜೆಪಿ ನಾಯಕ ವಿಜಯೇಂದ್ರ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಜನಪ್ರಿಯ ನಟನ ನುಡಿಗೆ ಮಿಶ್ರ ಪ್ರತಿಕ್ರಿಯೆಗಳು ಜೋರಾಗಿವೆ.

Leave a Reply

Your email address will not be published. Required fields are marked *