ನವ ಭಾರತ ಮತ್ತು ನವ ಕರ್ನಾಟಕ ನಿರ್ಮಿಸೋಣ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮತ

ನವ ಭಾರತ ಮತ್ತು ನವ ಕರ್ನಾಟಕ ನಿರ್ಮಿಸೋಣ ಕಲ್ಯಾಣ ಕರ್ನಾಟಕ

 ಕಲಬುರ್ಗಿ : ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದಲ್ಲಿ ವಿಶೇಷ ಸ್ಥಾನಮಾನ ಕಲ್ಪಿಸುವ 371 (ಜೆ) ವಿಧಿ ಜಾರಿಯ ದಶಮಾನೋತ್ಸವದ ಈ ಮಹತ್ವದ ಸಂದರ್ಭದಲ್ಲಿ ಸಮಸ್ತ ಜನತೆಗೆ ಹೃತ್ಪೂರ್ವಕ ಶುಭಾಶಯಗಳ ಗವಳನ್ನು ಕೋರಿದ ಸಿಎಂ ಸಿದ್ದರಾಮಯ್ಯ.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2024ರ ಅಂಗವಾಗಿ ರಾಷ್ಟ್ರಧ್ವಜಾರೋಹಣ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ ಈ ಸಂದರ್ಭದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವ ಅವಕಾಶ ಲಭಿಸಿದ್ದು ಧನ್ಯತೆಯ ಭಾವ ಮೂಡಿಸಿದೆ. ಹಾಗೂ ಈ ಭಾಗದ ಅಭಿವೃದ್ಧಿಯ ಸಂಕಲ್ಪವನ್ನು ಇನ್ನಷ್ಟು ಬಲಪಡಿಸಿದೆ ಎಂದರು.

1947ರಲ್ಲಿ ಭಾರತಕ್ಕೆ ಸ್ವಾತಂತ್ರ‍್ಯ ಬಂದರೂ ಹೈದರಾಬಾದ್ ನಿಜಾಮರ ಆಳ್ವಿಕೆಯಲ್ಲಿದ್ದ ಬೀದರ್, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸ್ವಾತಂತ್ರ‍್ಯದ ಬೆಳಕು ಬಂದಿದ್ದು ಒಂದು ವರ್ಷದ ನಂತರ. ಸಂಖ್ಯಾತ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭ ಭಾಯಿ ಪಟೇಲರ ಸಂಕಲ್ಪಶಕ್ತಿ, ಜವಾಹರ್ ಲಾಲ್ ನೆಹರು ಅವರ ದೂರದೃಷ್ಟಿಯ ಫಲವಾಗಿ ಕಲ್ಯಾಣ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು. ಹಾಗಾಗಿ ಕಲ್ಯಾಣ ಕರ್ನಾಟಕದ ವಿಮೋಚನೆಗಾಗಿ ಹೋರಾಡಿದ ಎಲ್ಲ ಮಹನೀಯರನ್ನು ನಾನು ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸ್ಮರಿಸುತ್ತೇನೆ.

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆ, ಧರ್ಮ ಮೊದಲಾದ ಕ್ಷೇತ್ರಗಳಿಗೆ ಗಮನಾರ್ಹ ಕೊಡುಗೆ ನೀಡಿದ ಈ ಪ್ರದೇಶ ವಿಶ್ವವೇ ನಿಬ್ಬೆರಗಾಗುವಂತಹ ಸಾಮಾಜಿಕ ಕ್ರಾಂತಿಗೆ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮಾದರಿ ಆಡಳಿತಕ್ಕೆ ಭದ್ರ ಬುನಾದಿ ಹಾಕಿದ ಪವಿತ್ರ ಭೂಮಿಯಾಗಿದೆ. ಶರಣರ ಚಳುವಳಿಗೆ ಬಸವಣ್ಣನವರು ಮುಂದಾಳತ್ವ  ವಹಿಸಿದ್ದರು. ಬಸವ ತತ್ವದಲ್ಲಿ ನಂಬಿಕೆ ಇಟ್ಟು ಮನ್ನಡೆಯುತ್ತಿರುವ ನಮ್ಮ ಸರ್ಕಾರ “ವಿಶ್ವಗುರು ಬಸವಣ್ಣ – ಸಾಂಸ್ಕೃತಿ ನಾಯಕರು” ಎಂದು ಘೋಷಿಸಿದೆ. ಕಲ್ಯಾಣ ಚಾಲುಕ್ಯರು, ಬಹಮನಿ ಸುಲ್ತಾನರು, ರಾಷ್ಟ್ರಕೂಟರ ಆಳ್ವಿಕೆಯ ಭವ್ಯ ಪರಂಪರೆ ಹೊಂದಿದ ಪ್ರದೇಶ ಇದಾಗಿದೆ.

ಕನ್ನಡದ ಮೊಟ್ಟ ಮೊದಲ ಉಪಲಬ್ಧ ಗ್ರಂಥ “ಕವಿರಾಜ ಮಾರ್ಗ” ನೀಡಿದ ಅಮೋಘವರ್ಷ ನೃಪತುಂಗನ ನಾಡು ಇದಾಗಿದೆ. ಸೂಫಿ-ಸಂತರ ಈ ಬೀಡು, ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ದೇಶದ ವಿವಿಧ ಪ್ರಾಂತ್ಯಗಳು ಜಾತಿ-ಲಿಂಗ ಅಸಮಾನತೆ, ಊಳಿಗಮಾನ್ಯತೆ ಮುಂತಾದ ಸಮಸ್ಯೆಗಳಲ್ಲಿ ಮುಳುಗಿದ್ದಾಗ ಕಲ್ಯಾಣ ಕರ್ನಾಟಕವು ದೀಪ ಹಚ್ಚಿ ದಾರಿ ತೋರುವ ಕೈಮರದಂತೆ ಕೆಲಸ ಮಾಡಿದೆ. ಒಂದು ಕಾಲಕ್ಕೆ ಬೌದ್ಧ ಧರ್ಮವನ್ನು ಪೋಷಿಸಿದ್ದ ಈ ನೆಲ ೧೨ ನೇ ಶತಮಾನದ ಹೊತ್ತಿಗೆ ಇಡೀ ಜಗತ್ತಿನಲ್ಲಿಯೆ ಅಭೂತ ಪೂರ್ವವಾದ ಪ್ರಜಾಪ್ರಭುತ್ವದ ಆಶಯಗಳನ್ನು ಹುಟ್ಟು ಹಾಕಿತು. ಈ ಭಾಗವು ಹಲವು ಧರ್ಮಗಳ ನೆಲೆವೀಡಾಗಿದೆ. ಎಲ್ಲ ಧರ್ಮಗಳು ಸಾಮರಸ್ಯದಿಂದ ಒಟ್ಟುಗೂಡಿ ಬದುಕುವ ಮೂಲಕ ಇಡೀ ದೇಶಕ್ಕೆ  ನಾವು ಮಾದರಿ ಎಂದು ಕಲ್ಯಾಣ ಕರ್ನಾಟಕದ ಜನ ಸಾರಿ ಹೇಳುತ್ತಿದ್ದಾರೆ. ಹಾಗಾಗಿ ಈ ಭಾಗದ ಜನ ನಮಗೆ ಸದಾ ಮಾದರಿ ಎಂದರು.

ಬಸವ ಕಲ್ಯಾಣದಲ್ಲಿ ಹೊತ್ತಿಕೊಂಡ ಶರಣರ ಚಳುವಳಿಯು ಇಡೀ ಉಪಖಂಡದ ಬೇರೆ ಬೇರೆ ಭಾಗಗಳಿಂದ ಸಮಾನತಾವಾದಿ ಆಶಯಗಳನ್ನು ಹೊಂದಿದ್ದ ಜನರನ್ನು ಒಟ್ಟುಗೂಡಿಸಿತು. ಜಾತಿ, ವರ್ಗ, ವರ್ಣ, ಲಿಂಗ ತಾರತಮ್ಯವಿಲ್ಲದ ಸಮ-ಸಮಾಜ ನಿರ್ಮಾಣದ ಆಶಯವನ್ನು ತಾತ್ಕಾಲಿಕವಾಗಿಯಾದರೂ ಈಡೇರಿಸಿತ್ತು. ಶರಣರ ವಚನ ಚಳುವಳಿಯು ಇವತ್ತಿಗೂ ಕೂಡ ಸಮಾನತಾವಾದಿ ಆಶಯಗಳನ್ನು ಹೊತ್ತ ಜನರಿಗೆ ಪ್ರೇರಣೆಯಾಗಿದೆ. ಆ ನಂತರ  ಬ್ರಿಟೀಷರ ವಿರುದ್ಧ ಸೆಟೆದೆದ್ದು ನಿಂತ ಸುರಪುರದ ರಾಜಾ ವೆಂಕಟಪ್ಪ ನಾಯಕ ಮುಂತಾದವರು ಇತಿಹಾಸದಲ್ಲಿ ಶಾಶ್ವತವಾಗಿ ನಿಲ್ಲುತ್ತಾರೆ. ಸ್ವಾತಂತ್ರ‍್ಯ ಹೋರಾಟದಲ್ಲಿ ಕಲ್ಯಾಣ ಕರ್ನಾಟಕವು ರಾಜ್ಯದ ಬೇರೆ ಬೇರೆ ಭಾಗಗಳ ಜನರಿಗಿಂತ ಒಂದು ಕೈ ಹೆಚ್ಚೆ ಎಂಬAತೆ ಹೋರಾಟ ಮಾಡಿದೆ ಎಂದರು.

ಭಾರತದಲ್ಲಿ ವಿಲೀನಗೊಳ್ಳಲು ನಿರಾಕರಿಸಿದ ಎರಡು ಪ್ರಾಂತ್ಯಗಳೆAದರೆ ಮೈಸೂರು ಮತ್ತು ಹೈದ್ರಾಬಾದ್. ಮೈಸೂರು ಚಲೋ, ಹೈದರಾಬಾದ್ ವಿಮೋಚನಾ ಚಳುವಳಿ, ಎರಡೂ ಆಯಾ ಭಾಗದ ಜನರು ನಮಗೆ ರಾಜರ ಆಳ್ವಿಕೆ ಸಾಕು, ಪ್ರಜಾಪ್ರಭುತ್ವ ಬೇಕು ಎಂದು ಪ್ರಕಟಿಸಿದ ಆಶೋತ್ತರಗಳು. ಜನರ ಆಶೋತ್ತರಗಳಿಗೆ ಮಣಿದ ಮೈಸೂರು ರಾಜಪ್ರಭುತ್ವವು ಬಹುಬೇಗ ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡಿತು. ಆದರೆ ಈ ಭಾಗಕ್ಕೆ ದೊಡ್ಡ ಪ್ರಮಾಣದ ತ್ಯಾಗ ಬಲಿದಾನಗಳ ಮೂಲಕವೆ ಸ್ವಾತಂತ್ರ‍್ಯ ದೊರಕಿತು. ಕಲ್ಯಾಣ ಕರ್ನಾಟಕವು ನಾಲ್ಕು ಮಹತ್ವದ ಹೋರಾಟಗಳನ್ನು ಮಾಡಿದೆ. ಭಾರತದ ಸ್ವಾತಂತ್ರ‍್ಯ ಹೋರಾಟ, ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟ, ಕನ್ನಡ ಭಾಷಿಕರು ಒಗ್ಗೂಡುವ ಭಾಷಾವಾರು ಪ್ರಾಂತ್ಯ ರಚನೆಯ ಹೋರಾಟ ಮತ್ತು ಆರ್ಟಿಕಲ್ ೩೭೧ ಜೆ ರಚನೆಗಾಗಿ ನಡೆದ ಚಳುವಳಿ. ಇವುಗಳನ್ನು ಹೊಸ ತಲೆಮಾರು ಎಂದಿಗೂ ಮರೆಯಬಾರದು. ಬ್ರಿಟೀಷರು ಮತ್ತು ನಿಜಾಮರ ಆಳ್ವಿಕೆಯಲ್ಲಿ ಹೈದರಾಬಾದ್-ಕರ್ನಾಟಕ ಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿತ್ತು. ಮರಾಠಿ, ತೆಲುಗು, ಉರ್ದು ಹಾಗೂ ಇಂಗ್ಲೀಷ್ ಭಾಷೆಗಳ ಅಬ್ಬರದಲ್ಲಿ ಕನ್ನಡ ಭಾಷೆಯನ್ನು ತೀವ್ರವಾಗಿ ಕಡೆಗಣಿಸಲಾಗಿತ್ತಲ್ಲದೆ ಅಭಿವೃದ್ಧಿ ಮರೀಚಿಕೆಯಾಗಿತ್ತು ಎಂದರು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಮತ್ತು ೩೭೧ಜೆ ಕಾಯ್ದೆಯ ದಶಮಾನೋತ್ಸವದ ಈ ಸಂದರ್ಭದಲ್ಲಿ ಮತ್ತೊಮ್ಮೆ ತಮ್ಮೆಲ್ಲರಿಗೂ ಶುಭ ಕೋರುತ್ತಾ, ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಯಾಗದ ಹೊರತು ರಾಜ್ಯದ ಅಭಿವೃಧ್ಧಿ ಅಸಾಧ್ಯ. ಇಲ್ಲಿನ ಜನರ ತಲಾದಾಯ ವೃದ್ಧಿ ಜೊತೆಗೆ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಸುಧಾರಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ನಮ್ಮ ಗುರಿಯಾಗಿದೆ. ದೇಶದ ಏಕತೆ ಮತ್ತು ಸಮಗ್ರತೆ ಕಾಪಾಡಲು ಬದ್ಧರಾಗಿ ದೃಢಸಂಕಲ್ಪ ಮಾಡುವುದರ ಮೂಲಕ ನವ ಭಾರತ ಮತ್ತು ನವ ಕರ್ನಾಟಕ ನಿರ್ಮಿಸೋಣ.

Leave a Reply

Your email address will not be published. Required fields are marked *