ಕೇಂದ್ರ ಅನುದಾನ ದುರ್ಬಳಕೆ: ವಿಜಯೇಂದ್ರ ಸದ್ದು!

ಕೇಂದ್ರ ಅನುದಾನ ದುರ್ಬಳಕೆ: ವಿಜಯೇಂದ್ರ ಸದ್ದು!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೇಂದ್ರದ 1,323 ಕೋಟಿ ರೂ. ಅನುದಾನ ದುರ್ಬಳಕೆಯನ್ನು ಆರೋಪಿಸಿದ್ದಾರೆ.

ಬೆಂಗಳೂರು : ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಬೇರೆ ಇಲಾಖೆಗಳಿಗೆ ವರ್ಗಾಯಿಸುವ ಮೂಲಕ ಹಣ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರವಾಗಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣದ ವಿಚಾರದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ದಾಖಲೆ ಸಹಿತ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ವಿಶೇಷ ಅನುದಾನವನ್ನು ಯಾವ ಉದ್ದೇಶಕ್ಕೆ ನೀಡಿರುತ್ತದೆಯೋ ಅದಕ್ಕಷ್ಟೇ ಬಳಸಬೇಕು. ಅದನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಆದರೆ ಸುಮಾರು 1,323 ಕೋಟಿ 96 ಲಕ್ಷ ರೂಪಾಯಿ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹಣ ಸದ್ಬಳಕೆ ಮಾಡದಿದ್ದರೂ ‘ಯುಟಿಲೈಜೇಶನ್ ಸರ್ಟಿಫಿಕೇಟ್’ (ಬಳಕೆ ಪ್ರಮಾಣ ಪತ್ರ) ಕಳುಹಿಸಿ ವಂಚಿಸಲಾಗಿದೆ,” ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಕೃಷ್ಣಭಾಗ್ಯ ಜಲನಿಗಮ ಕೂಡ ನಕಲಿ ಪ್ರಮಾಣ ಪತ್ರ ನೀಡುವ ಮೂಲಕ ಹಗರಣದಲ್ಲಿ ಭಾಗಿಯಾಗಿದೆ. ಈ ಬಗ್ಗೆ ಸರ್ಕಾರ ಕೂಡಲೇ ಪತ್ರಗಳನ್ನು ಬಹಿರಂಗಪಡಿಸಬೇಕು, ವಾಲ್ಮೀಕಿ ನಿಗಮದ ಹಣ ನೂರಾರು ಕೋಟಿ ರೂಪಾಯಿ ತೆಲಂಗಾಣಕ್ಕೆ ವರ್ಗಾವಣೆಯಾಗಿದೆ. ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಅನುಮತಿ ಇಲ್ಲದೆ ಇಷ್ಟೊಂದು ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಲು ಸಾಧ್ಯವೇ ಇಲ್ಲ. ಸಿಎಂ ಇದನ್ನು ಬೆಳಗಾವಿ ಅಧಿವೇಶನದಿಂದಲೂ ಸ್ಪಷ್ಟಪಡಿಸದೆ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಮೀಸಲಿಟ್ಟಿದ್ದ ಸುಮಾರು 5,000 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ. ಇದು ಯಾವ ಇಲಾಖೆಗೆ ಹೋಗಿದೆ? ಇಲ್ಲಿ ಭ್ರಷ್ಟಾಚಾರ ನಡೆದಿದೆಯೇ? ಇದಕ್ಕೆ ಸಿಎಂ ಉತ್ತರ ನೀಡಲೇಬೇಕು ವಿಜಯೇಂದ್ರ ಆಗ್ರಹಿಸಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *