ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸಲು ಮತ್ತೊಮ್ಮೆ ಕಾಲಾವಕಾಶ ಕೋರಿರುವುದಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ ಆಕ್ಷೇಪಣೆ ಸಲ್ಲಿಸಿದ್ದು, ತನಿಖಾಧಿಕಾರಿ ಬದಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೈಸೂರು ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಸಲು ಸಮಯ ನಿಗದಿಯಾಗಿತ್ತು. ಆದರೆ ಈ ಹಿಂದೆಯೇ ಕಾಲಾವಕಾಶ ಕೋರಿದ್ದ ಪೊಲೀಸರು ಇದೀಗ ಮತ್ತೊಮ್ಮೆ ವರದಿ ಸಲ್ಲಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
ಇದಕ್ಕೆ ಆಕ್ಷೇಪ ಸಲ್ಲಿಕೆ ಮಾಡಿದ ದೂರುದಾರ ಸ್ನೇಹಮಯಿಕೃಷ್ಣ ಅವರು, ಪೊಲೀಸರು ಆರೋಪಿಗಳ ಪರ ಇದ್ದು, ಅನಗತ್ಯವಾಗಿ ವರದಿ ಸಲ್ಲಿಕೆಗೆ ವಿಳಂಬ ಮಾಡಲಾಗುತ್ತಿದ್ದಾರೆ. ತನಿಖೆಯ ವಿಧಾನವು ಕಾನೂನಿನ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ವಾದಿಸಿದರು.
ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರೆ 4 ಆರೋಪಿಗಳನ್ನು ದೋಷಮುಕ್ತ ಗೊಳಿಸಲು ಸಾಧ್ಯವಿಲ್ಲ. ಅಲ್ಲದೆ, ತನಿಖೆ ವಿಳಂಬ ಮಾಡಿ ಪ್ರಕರಣವನ್ನು ಬಾಕಿ ಇಡುವಂತೆ ಮಾಡುವುದು ಸಾಧ್ಯವಿಲ್ಲ, ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಕಾರಣ ತನಿಖಾಧಿಕಾರಿಯನ್ನು ಬದಲಿಸಬೇಕು ಎಂದು ಕೋರಿದರು.
ದೂರುದಾರರ ಮನವಿಗೆ ಅಗತ್ಯ ಆಕ್ಷೇಪಣೆ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿ ಮುಂದಿನ ವಿಚಾರಣೆಯನ್ನು ಜೂ.17ಕ್ಕೆ ಮುಂದೂಡಿಕೆ ಮಾಡಿತು.