ಮೈಸೂರು: ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಕ್ಕೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದ್ದಾರೆ ಎಂದು ಮೈಸೂರು – ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸಂಸತ್ ಅಧಿವೇಶನದ ನೇಪಥ್ಯದಲ್ಲಿ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಭೇಟಿ ಮಾಡಿದ ನಂತರ ಸಂಸದ ಯದುವೀರ್ ಒಡೆಯರ್ ಮಾಹಿತಿ ನೀಡಿದ್ದಾರೆ.
ವಿಮಾನ ನಿಲ್ದಾಣ ವಿಸ್ತರಣೆಗೆ ನೆರವು: ಮೈಸೂರಿನಲ್ಲಿ ವಿಮಾನ ನಿಲ್ದಾಣ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಮನವಿ ಮಾಡಿದಾಗ ಕೂಡಲೇ ಅದಕ್ಕೆ ಸ್ಪಂದಿಸಿ, ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು ಎಂದು ಸಂಸದರು ತಿಳಿಸಿದ್ದಾರೆ.
ವಿಮಾನ ನಿಲ್ದಾಣ ವಿಸ್ತರಣೆಗೆ ಬೇಕಿರುವ 46 ಎಕರೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ಮನವಿ ಮಾಡುತ್ತೇನೆ. ಇದರಿಂದ ವಿಮಾನ ನಿಲ್ದಾಣ ವಿಸ್ತರಣೆ ಕಾರ್ಯ ತ್ವರಿತಗತಿಯಲ್ಲಿ ನಡೆಯಲಿದೆ ಎಂದು ಯದುವೀರ್ ವಿವರಿಸಿದ್ದಾರೆ.
ಐತಿಹಾಸಿಕ ರೈಲು ನಿಲ್ದಾಣಕ್ಕೆ ಆಧುನಿಕ ಸ್ಪರ್ಶ: ಪಾರಂಪರಿಕ ನಗರವಾಗಿರುವ ನಮ್ಮ ಮೈಸೂರು ರೈಲ್ವೆ ನಿಲ್ದಾಣ ಐತಿಹಾಸಿಕ ಸ್ಥಳಗಳಲ್ಲಿ ಒಂದಾಗಿದೆ. ಇದರ ಆಧುನೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ ಕೂಡಲೇ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿದರು. ಇದಕ್ಕೆ ಬೇಕಾಗಿರುವ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು ಎಂದು ಸಂಸದರು ವಿವರಿಸಿದ್ದಾರೆ.
ವಿನ್ಯಾಸ ಅಂತಿಮಗೊಳಿಸಲಿರುವ ಸಂಸದರು: ಮೈಸೂರು ರೈಲು ನಿಲ್ದಾಣದ ಆಧುನೀಕರಣಕ್ಕೆ ಸಂಬಂಧಿಸಿದಿಂತೆ ವಿನ್ಯಾಸವನ್ನು ನಾನು ಅಂತಿಮಗೊಳಿಸುತ್ತಿದ್ದೇನೆ. ಇದಕ್ಕೆ ಅನುಮೋದನೆ ದೊರೆತ ಕೂಡಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
ಅತಿ ಶೀಘ್ರದಲ್ಲೇ ಮೈಸೂರಿನಲ್ಲಿ ಬಹುತೇಕ ಎಲ್ಲ ರೈಲ್ವೆ ಯೋಜನೆಗಳ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು, ನೂತನ ಯೋಜನೆಗಳು ಕಾರ್ಯರೂಪಕ್ಕೆ ಬರಲಿವೆ. ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಇಡೀ ಮೈಸೂರು ಹಾಗೂ ಕೊಡಗು ಕ್ಷೇತ್ರದ ಜನರ ಪರವಾಗಿ ನಾನು ಇದೇ ಸಂದರ್ಭದಲ್ಲಿ ರೈಲ್ವೆ ಸಚಿವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.