ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ದರೋಡೆಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ತಮಿಳುನಾಡಿನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ತಂಡ ತಮಿಳುನಾಡಿನಲ್ಲಿ ದಾಳಿ ನಡೆಸಿ ಆರೋಪಿಯನ್ನು ಹಿಡಿದು ತಂದಿದೆ.
ಬನಶಂಕರಿ ಪೊಲೀಸರ ವಿಶೇಷ ಪೊಲೀಸರ ತಂಡದ ಕಾರ್ಯಾಚರಣೆ
ಬೆಂಗಳೂರಿನ ಕಾಡುಗೊಂಡನಹಳ್ಳಿ ನಿವಾಸಿಯಾಗಿರುವ ಜೆ.ಕ್ಸೇವಿಯರ್ ದರೋಡೆಯ ನಂತರ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ. ಆರೋಪಿಯು ಕುಪ್ಪಂ ಪ್ರದೇಶದಲ್ಲಿ ಹಣದ ಬಾಕ್ಸ್ನ್ನು ತೆಗೆದು ನಗದನ್ನು ಚೀಲದಲ್ಲಿ ತುಂಬಿಕೊಂಡಿದ್ದಲ್ಲದೇ ದರೋಡೆಗೆ ಬಳಸಿದ್ದ ಇನ್ನೋವಾ ಕಾರನ್ನೂ ಅಲ್ಲಿಯೇ ಬಿಟ್ಟು, ಮತ್ತೊಂದು ವ್ಯಾಗನಾರ್ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದ ಎಂದು ತಿಳಿದುಬಂದಿದೆ. ಚಿತ್ತೂರಿನ ಕುಪ್ಪಂ ಬಳಿ ಹಣದ ಪೆಟ್ಟಿಗೆಗಳು ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬನಶಂಕರಿ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ಪೊಲೀಸರ ತಂಡ ಸೆರೆಹಿಡಿದಿದೆ. ಆರೋಪಿಯನ್ನು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ದರೋಡೆಯಾಗಿದ್ದ 7 ಕೋಟಿ ರೂ.ಗಳಲ್ಲಿ 5 ಕೋಟಿ ವಶ
ನಗರದ ಡೈರಿ ಸರ್ಕಲ್ ಫ್ಲೈಓವರ್ ಮೇಲೆ ಎಟಿಎಂ ವಾಹನದಲ್ಲಿದ್ದ ಬರೋಬ್ಬರಿ 7.11 ಕೋಟಿ ರೂ. ದೋಚಿಕೊಂಡು ಗ್ಯಾಂಗ್ ಇನೋವಾ ಕಾರಿನಲ್ಲಿ ಪರಾರಿಯಾಗಿತ್ತು. ಈ ಸಂಬಂಧ ಕೃತ್ಯಕ್ಕೆ ಬಳಸಲಾಗಿದ್ದ ಇನ್ನೋವಾ ಕಾರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದರು. ದರೋಡೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡಿದ್ದರು. ಕೇಸ್ನ ಪ್ರಮುಖ ಆರೋಪಿಗಳಾದ ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ಮತ್ತು ಕಿಂಗ್ಪಿನ್ ರವಿಯ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
For More Updates Join our WhatsApp Group :




