1 ತಿಂಗಳು ನೀಡಿದ್ದರೂ ಕ್ರಮವಿಲ್ಲ; ಅ.15ಕ್ಕೆ ಮುಂದಿನ ವಿಚಾರಣೆ

1 ತಿಂಗಳು ನೀಡಿದ್ದರೂ ಕ್ರಮವಿಲ್ಲ; ಅ.15ಕ್ಕೆ ಮುಂದಿನ ವಿಚಾರಣೆ

ಬೆಂಗಳೂರು : ಬೈಕ್​ ಟ್ಯಾಕ್ಸಿ ನಿರ್ಬಂಧ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಒಂದು ತಿಂಗಳು ಸಮಯ ನೀಡಿದ್ದರೂ ಸರ್ಕಾರ ಈವರೆಗೆ ನೀತಿ ರೂಪಿಸಿಲ್ಲ. ಹೀಗಾಗಿ ಸರ್ಕಾರದ ನಿರ್ಬಂಧಕ್ಕೆ ತಡೆ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹೈಕೋರ್ಟ್​ ಹೇಳಿದೆ. ಬೈಕ್ ಟ್ಯಾಕ್ಸಿ ಬಗ್ಗೆ ನಿಮ್ಮ ವಾದ ಮಂಡಿಸಿ. ಆ ಬಳಿಕ ಸೂಕ್ತ ಆದೇಶ ಹೊರಡಿಸುವುದಾಗಿ ತಿಳಿಸಿರುವ ಕೋರ್ಟ್, ಮುಂದಿನ​ ವಿಚಾರಣೆಯನ್ನ ಅಕ್ಟೋಬರ್​ 15ಕ್ಕೆ ನಿಗದಿಪಡಿಸಿದೆ.

‘ಬೈಕ್​ ಟ್ಯಾಕ್ಸಿಗೆ ಸರ್ಕಾರ ಅನುಮತಿ ನೀಡಿಲ್ಲ’

ಪ್ರಯಾಣಿಕರನ್ನು ಕರೆದೊಯ್ಯುವ ಬೈಕ್​ ಟ್ಯಾಕ್ಸಿಗೆ ಸರ್ಕಾರ ಅನುಮತಿ ನೀಡಿಲ್ಲ. ಬೈಕ್ ಗಳನ್ನು ಡೆಲಿವರಿಗಾಗಿ ಬಳಸಲು ಮಾತ್ರ ಅವಕಾಶ ನೀಡಲಾಗಿದ್ದು, ಆ ಬಗ್ಗೆ ನೀತಿ ರೂಪಿಸಿದ್ದೇವೆ. ಆದರೆ ಬೈಕ್ ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯಲು ಅವಕಾಶ ನೀಡಿಲ್ಲ. ಅನುಮತಿಯಿಲ್ಲದಿದ್ದರೂ ಬೈಕ್ ಟ್ಯಾಕ್ಸಿಗಳನ್ನು ಬಳಸಲಾಗುತ್ತಿದೆ. ಹೀಗಾಗಿ ಬೈಕ್ ಟ್ಯಾಕ್ಸಿ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್​ ಗೆ ರಾಜ್ಯ ಸರ್ಕಾರದ ಪರ ವಕೀಲ ಎ.ಜಿ. ಶಶಿಕಿರಣ್ ಶೆಟ್ಟಿ ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೋರ್ಟ್​, ಬೈಕ್ ಟ್ಯಾಕ್ಸಿ ಬದಲು ಗಿಗ್ ಕಾರ್ಮಿಕರ ಬಗ್ಗೆ ಹೇಳುತ್ತಿದ್ದೀರಿ. ಒಂದು ತಿಂಗಳು ಸಮಯ ನೀಡಿದ್ದರೂ ಈ ಬಗ್ಗೆ ಸರ್ಕಾರ ನೀತಿ ರೂಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಹೈಕೋರ್ಟ್​ ಮೊರೆ ಹೋಗಿದ್ದ ಕಂಪನಿಗಳು

ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಖಾಸಗಿ, ಸಾರಿಗೆ ಸಂಘಟನೆಗಳು ತೀವ್ರ ಪಟ್ಟು ಹಿಡಿದ ಬೆನ್ನಲ್ಲೇ ಸುರಕ್ಷತೆಯ ದೃಷ್ಟಿಯಿಂದ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ರದ್ದಾಗಿತ್ತು. ನಿರ್ಧಾರ ಪ್ರಶ್ನಿಸಿ ಆ್ಯಪ್ ಆಧಾರಿತ ಸೇವೆ ಒದಗಿಸುವ ಕಂಪನಿಗಳು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದವು. ಈ ವೇಳೆ ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಬೆಂಗಳೂರು ವ್ಯಾಪ್ತಿಯಲ್ಲೇ 1.20 ಲಕ್ಷ ಬೈಕ್​ ಗಳು ಬೈಕ್ ಟ್ಯಾಕ್ಸಿ ಸೇವೆಗೆ ನೋಂದಣಿ ಮಾಡಿಕೊಂಡಿವೆ. ಇನ್ನು ರಾಜ್ಯದಾದ್ಯಂತ 6 ಲಕ್ಷಕ್ಕೂ ಹೆಚ್ಚು ಸವಾರರು ಬೈಕ್ ಟ್ಯಾಕ್ಸಿ ನಂಬಿಕೊಂಡು ತಮ್ಮ ಜೀವನ ಸಾಗಿಸುತ್ತಿರುವುದು ಇಲ್ಲಿ ಗಮನಾರ್ಹ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *