ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ಕೃತ್ಯದ ಬಗ್ಗೆ ಚರ್ಚಿಸಲು ಹಾಗೂ ಒಗ್ಗಟ್ಟನ್ನು ಪ್ರದರ್ಶಿಸಲು ವಿಶೇಷ ಅಧಿವೇಶನವನ್ನು ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ.

ಅನೇಕ ವಿಪಕ್ಷ ಸಂಸದರು ಕೂಡ ಇದೇ ರೀತಿಯ ಬೇಡಿಕೆಯನ್ನು ಇಟ್ಟಿದ್ದಾರೆ. ಕಳೆದ ವಾರ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನ ಪ್ರವಾಸಿಗರು ಸಾವನ್ನಪ್ಪಿದ್ದು, ಈ ಘಟನೆಗೆ ದೇಶ ವಿದೇಶಗಳಿಂದ ಖಂಡನೆ ವ್ಯಕ್ತವಾಗಿದೆ.
ಈ ಘಟನೆ ಸಂಬಂಧ ವಿಶೇಷ ಅಧಿವೇಶನಕ್ಕೆ ಆಗ್ರಹಿಸಿ ಪತ್ರ ಬರೆದಿರುವ ಖರ್ಗೆ, “ಈ ಕ್ಷಣದಲ್ಲಿ ಏಕತೆ ಮತ್ತು ಒಗ್ಗಟ್ಟು ಪ್ರದರ್ಶನ ಅತ್ಯಗತ್ಯವಾಗಿದ್ದು, ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವುದು ಮುಖ್ಯ ಎಂದು ವಿರೋಧ ಪಕ್ಷಗಳು ಭಾವಿಸಿವೆ” ಎಂದು ತಿಳಿಸಿದ್ದಾರೆ.
ಒಗ್ಗಟ್ಟಿನ ಪ್ರದರ್ಶನಕ್ಕೆ ಇದು ಶಕ್ತಿಯುತ ಮಾರ್ಗವಾಗಿದೆ. ಪಹಲ್ಗಾಮ್ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿಯನ್ನು ಎದುರಿಸಲು ನಮ್ಮ ಸಾಮೂಹಿಕ ಸಂಕಲ್ಪ ನಡೆಸಬೇಕಿದೆ. ಅದಕ್ಕಾಗಿ ಅಧಿವೇಶನ ಕರೆಯಬೇಕೆಂದು ಖರ್ಗೆ ಒತ್ತಾಯಿಸಿದ್ದಾರೆ.
ಉಗ್ರರ ಕೃತ್ಯ ಸಂಬಂಧ ಕರೆಯಲಾಗಿದ್ದ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಗೈರಿನ ಕುರಿತು ನಿನ್ನೆ ರಾಜಸ್ಥಾನದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಟೀಕಿಸಿದರು. ಅಲ್ಲದೇ ಬಿಜೆಪಿ ದೇಶ ವಿಭಜನೆ ಮಾಡುತ್ತಿದೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಆದರೆ, ಬಿಜೆಪಿ ದ್ವೇಷ ಹರಡುತ್ತಿದ್ದು, ಜನರನ್ನು ವಿಭಜಿಸುತ್ತಿದೆ ಎಂದು ಕಿಡಿಕಾರಿದ್ದರು.
ಮಲ್ಲಿಕಾರ್ಜುನ ಖರ್ಗೆ ಕಳೆದ ರಾತ್ರಿ ವಿಶೇಷ ಅಧಿವೇಶನಕ್ಕೆ ಆಗ್ರಹಿಸಿ ಪತ್ರ ಬರೆದಿರುವ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದು, ಈ ಭೀಕರ ಘಟನೆ ಖಂಡಿಸಿ, ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಬೇಕಿದೆ ಎಂದಿದ್ದಾರೆ.
ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆ ಬೆನ್ನಲ್ಲೇ ಪಾಕ್ ವಿರುದ್ಧ ಭಾರತ ಹಲವು ಬಿಗಿ ಕ್ರಮಕ್ಕೆ ಮುಂದಾಗಿದ್ದು, ಸಿಂಧೂ ಜಲ ಒಪ್ಪಂದ ಸ್ಥಗಿತ, ಪಾಕಿಸ್ತಾನಿ ನಾಗರಿಕರ ವೀಸಾಗಳನ್ನು ರದ್ದು ಕ್ರಮಕ್ಕೆ ಮುಂದಾಗಿದೆ.