ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವಾರು ಭಾಗಗಳು ಜಲಾವೃತಗೊಂಡಿದ್ದು, ಅಧಿಕಾರಿಗಳು ಮಳೆಯಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸಲು ಗಮನಹರಿಸುತ್ತಿದ್ದಾರೆ, ಯಾರೂ ಚಿಂತಿಸುವ ಅಗತ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಆಡಳಿತದ ವೈಫಲ್ಯದ ಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಪ್ರತ್ಯುತ್ತರ ನೀಡಿದ ಡಿ ಕೆ ಶಿವಕುಮಾರ್, ಪ್ರಕೃತಿಯನ್ನು ತಡೆಯಲು ಸಾಧ್ಯವೇ, ಇದು ನೈಸರ್ಗಿಕ ಚಟುವಟಿಕೆ ಎಂದರು. ಬೆಂಗಳೂರಿನಲ್ಲಿ ಕಳೆದ 36 ಗಂಟೆಗಳ ಕಾಲ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು ಕೂಡ ಜನಜೀವನ ಅಸ್ತವ್ಯಸ್ತವಾಯಿತು.
ಜನರು ಮೊಣಕಾಲು ಆಳದ ನೀರಿನ ಮೂಲಕ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದ್ದು, ಹಲವಾರು ಸ್ಥಳಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ವರದಿಯಾಗಿದೆ.
ನಿನ್ನೆ ಸಂಜೆ ಇಬ್ಬರು ಮೃತಪಟ್ಟ ಮಾಹಿತಿ ಸಿಕ್ಕಿದ್ದು ನಾವು ಅಧಿಕಾರಿಗಳನ್ನು ಕಳುಹಿಸಿದ್ದೇವೆ. ನಾನು ಕೂಡ ಹೋಗುತ್ತೇನೆ. ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಎಲ್ಲರೂ ಸ್ಥಳಕ್ಕೆ ಧಾವಿಸಿದ್ದಾರೆ. ಯಾರೂ ಚಿಂತಿಸುವ ಅಗತ್ಯವಿಲ್ಲ. ಜನರ ಜೀವ ಮತ್ತು ಆಸ್ತಿಗಳನ್ನು ಉಳಿಸುವುದು ನಮ್ಮ ಆದ್ಯತೆಯಾಗಿದೆ. ನಾವು ಅದಕ್ಕೆ ಬದ್ಧರಾಗಿದ್ದೇವೆ ಎಂದು ಶಿವಕುಮಾರ್ ಹೇಳಿದರು.
ಸರ್ಕಾರದ ಎರಡು ವರ್ಷಗಳ ಆಡಳಿತದ ಸ್ಮರಣಾರ್ಥ ಹೊಸಪೇಟೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯಾಣಿಸುವ ಮೊದಲು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕೆಲವು ಮಳೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ನಿನ್ನೆ ರಾತ್ರಿ ನಾನು ಕೆಲವು ಸ್ಥಳಗಳಿಗೆ ಭೇಟಿ ನೀಡಿದ್ದೆ. ನಾವು ಎಲ್ಲೇ ಇದ್ದರೂ, ಬೆಂಗಳೂರಿನ ಹೆಮ್ಮೆಯನ್ನು ಉಳಿಸುವುದು ನಮ್ಮ ಕರ್ತವ್ಯ, ಮತ್ತು ನಾವು ಅದನ್ನು ಮಾಡುತ್ತೇವೆ ಎಂದರು.
ಕಾಂಗ್ರೆಸ್ ಸರ್ಕಾರ ಮತ್ತು ಅದರ “ಬ್ರಾಂಡ್ ಬೆಂಗಳೂರು” ನ್ನು ಟೀಕಿಸುತ್ತಿರುವ ವಿರೋಧ ಪಕ್ಷದ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿ, “ಪ್ರಾಕೃತಿಕ ವಿಕೋಪ ನಿಲ್ಲಿಸಬಹುದೇ? ಯಾರೂ ತಡೆಯಲು ಸಾಧ್ಯವಿಲ್ಲ. ಅವರು ಟೀಕಿಸಲಿ, ನಾವು ನಮ್ಮ ಕರ್ತವ್ಯ ಮಾಡುತ್ತೇವೆ” ಎಂದರು. ಹೆಚ್ಚಿನ ಮಳೆಯಾಗುವ ಸಾಧ್ಯತೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮಳೆ ಬರಲಿ, ಯಾರಾದರೂ ಏನು ಬೇಕಾದರೂ ಹೇಳಲಿ, ಹೆಚ್ಚು ಮಳೆ ಬಂದರೆ ರಾಜ್ಯಕ್ಕೆ ಒಳ್ಳೆಯದು” ಎಂದು ಹೇಳಿದರು.
ಮಳೆಯ ನಡುವೆಯೂ ಬೆಂಗಳೂರಿನಲ್ಲಿ ರಸ್ತೆಗಳ ಸ್ಥಿತಿಯ ಬಗ್ಗೆ ಪ್ರಶ್ನಿಸಿದಾಗ, ಕೆಲಸ ನಡೆಯುತ್ತಿದೆ, ಶಾಶ್ವತ ಕಾಂಕ್ರೀಟ್ ರಸ್ತೆಗಳನ್ನು ಹಾಕಲಾಗುತ್ತಿದೆ ಎಂದು ಹೇಳಿದರು.