ಬೆಂಗಳೂರು: ಲೋಕಸಭೆ ಚುನಾವಣೆಯ ವೇಳೆ ಸಮಾಜದಲ್ಲಿ ಧಾರ್ಮಿಕ ದ್ವೇಷ ಹರಡಲು ಯತ್ನ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಗುರುವಾರ ಹೈಕೋರ್ಟ್ ತಡೆಯಾಜ್ಞೆ ನೀಡಿತು.
ಪ್ರಕರಣ ಸಂಬಂಧ ಅಧೀನ ನ್ಯಾಯಾಲಯಗಳ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.
ಅಲ್ಲದೆ, ಈ ಎರಡೂ ಅರ್ಜಿಗಳಲ್ಲಿ ಪ್ರತಿವಾದಿಗಳಾಗಿರುವ ಚಿಕ್ಕಮಗಳೂರು ಟೌನ್ ಮತ್ತು ಬಸವನಹಳ್ಳಿ ಠಾಣಾ ಪೊಲೀಸರು, ಚುನಾವಣಾ ಅಧಿಕಾರಿಗಳಾಗಿದ್ದ ಜಯಲಕ್ಷ್ಮಮ್ಮ ಮತ್ತು ದೀಪಕ್ ಅರವಿಂದ ಗರಗ್ ಅವರಿಗೆ ನೋಟಿಸ್ ನೀಡಿತು. ಬಳಿಕ ವಿಚಾರಣೆ ಮುಂದೂಡಿದೆ.