ತುಮಕೂರು: ವಿಷ ಮಿಶ್ರಿತ ಆಹಾರ ಸೇವಿಸಿ ಮೂವರು ಸಾವು?

ವಿಷ ಮಿಶ್ರಿತ ಆಹಾರ ಸೇವಿಸಿ ಮೂವರು ಸಾವು?

ಚಿಕಿತ್ಸೆ ನೀಡುತ್ತಿರುವ ವೈದ್ಯರು

ತುಮಕೂರು: ವಿಷ ಮಿಶ್ರಿತ ಆಹಾರ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದಿದೆ. ಕಾಟಮ್ಮ (45), ತಿಮ್ಮಕ್ಕ (85) ಮತ್ತು ಗಿರಿಯಮ್ಮ (38) ಮೃತ ದುರ್ದೈವಿಗಳು.

ಜಾತ್ರಾ ನಿಮಿತ್ತ ಗ್ರಾಮದಲ್ಲಿ ಅಡುಗೆ ವ್ಯವಸ್ಥೆ ಮಾಡಲಾಗಿತ್ತು. ಮನೆಯಲ್ಲೇ ಅಡುಗೆ ಮಾಡಿ ಜನರಿಗೆ ಬಡಿಸಲಾಗಿತ್ತು. ಈ ಆಹಾರ ಸೇವಿಸಿದ ಗ್ರಾಮದ 18 ಮಹಿಳೆಯರು, 12 ಪುರುಷರು ಸೇರಿದಂತೆ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಅವರಿಗೆ ಗ್ರಾಮದ ಶಾಲಾ ಆವರಣದಲ್ಲಿ ತೆರಯಲಾಗಿರುವ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಷ ಮಿಶ್ರಿತ ಆಹಾರ ಸೇವಿಸಿ ಮೃತಪಟ್ಟ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ”ಮೃತಪಟ್ಟವರೆಲ್ಲರೂ ಬೇರೆ ಕಾಯಿಲೆಗೆ ಒಳಗಾಗಿದ್ದರಲ್ಲದೇ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು” ಎಂದು ತಿಳಿಸಿದ್ದಾರೆ.

”ಬುಳ್ಳಸಂದ್ರದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರಸಾದ ಸೇವಿಸಿದ ಕೆಲವರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಆದರೆ, ಸಾವು ಸಂಭವಿಸಿರುವುದು ಇದೇ ಕಾರಣಕ್ಕೆ ಎಂಬುದು ಸ್ಪಷ್ಟವಿಲ್ಲ. ಮೃತಪಟ್ಟವರು ಹಾಗೂ ಅನಾರೋಗ್ಯಕ್ಕೆ ಒಳಗಾದವರ ಕುರಿತು ಪರೀಕ್ಷೆ ನಡೆಸುತ್ತಿದ್ದು ವರದಿ ಬಂದ ನಂತರವಷ್ಟೇ ಕಾರಣ ತಿಳಿಯಲಿದೆ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಮಧುಗಿರಿ ಉಪವಿಭಾಗಾಧಿಕಾರಿ ಶಿವಪ್ಪ ಮಾತನಾಡಿ, ”ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಉಪ ಕೇಂದ್ರ ಸ್ಥಾಪನೆ ಮಾಡಿ ಸ್ಥಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕೆಲವರನ್ನು ಕಳುಹಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದು ತಿಳಿಸಿದ್ದಾರೆ.

ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದರ ವರದಿ ಬರಬೇಕಿದೆ.

Leave a Reply

Your email address will not be published. Required fields are marked *