ಬೆಂಗಳೂರು: ನಾನು ಯುವಕನಾಗಿದ್ದಾಗ ಜೀವನೋಪಾಯಕ್ಕಾಗಿ ಬೆಂಗಳೂರಿನ ಹೊಬೇಗೌಡನಗರ, ಸುಧಾಮನಗರ ಮತ್ತು ವಿಲ್ಸನ್ ಗಾರ್ಡನ್ ವಾರ್ಡುಗಳಲ್ಲಿ ಕಸ ಎತ್ತುವ ಗುತ್ತಿಗೆ ತೆಗೆದುಕೊಂಡಿದ್ದೆ. ಆಮೇಲೆ ನಮ್ಮ ತಂದೆಯವರು ಬೇಡ ಎಂದು ತಾಕೀತು ಮಾಡಿದ ಮೇಲೆ ಅದನ್ನು ಬಿಟ್ಟೆ. ಯಾವುದೇ ಕಾರಣಕ್ಕೂ ಸರ್ಕಾರಿ ಗುತ್ತಿಗೆ ತೆಗೆದುಕೊಳ್ಳ ಕೂಡದು ಎಂದು ಅವರು ಹೇಳಿದ್ದರು ಎಂಬ ಸಂಗತಿಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಮೇಲೆ ವಾಗ್ದಾಳಿ ನಡೆಸಿದ ಹೆಚ್ ಡಿ ಕುಮಾರಸ್ವಾಮಿ ಅವರು, ಕಸದ ಗುತ್ತಿಗೆ ನೀಡುವುದರಲ್ಲಿಯೂ ಕೋಟ್ಯಾಂತರ ರೂಪಾಯಿ ಲೂಟಿ ಮಾಡಲು ಹೊರಟಿದ್ದರು. ಮೂವತ್ತು ವರ್ಷಗಳಷ್ಟು ಸುದೀರ್ಘ ಅವಧಿಗೆ ಬೆಂಗಳೂರಿನ ಕಸ ಎತ್ತಲು ಚೆನ್ನೈನ ಒಬ್ಬ ವ್ಯಕ್ತಿಗೆ ಗುತ್ತಿಗೆ ನೀಡುವ ಹಗರಣಕ್ಕೆ ಮುಂದಾಗಿದ್ದರು. ಪ್ರತಿ ಟನ್ ಕಸ ಎತ್ತಲು ₹6500 ಕ್ಕಿಂತ ಹೆಚ್ಚು ಮೊತ್ತವನ್ನು ಪಾವತಿ ಮಾಡಿ ಅಲ್ಲಿಂದ ಕಮಿಷನ್ ಹೊಡೆಯಲು ಮುಂದಾಗಿದ್ದರು. ಇಲ್ಲಿ ಕಡಿಮೆ ಎಂದರೂ ₹15,000 ಕೋಟಿ ಹೊಡೆಯಲು ಹೊರಟಿದ್ದರು ಎಂದು ನಾನು ಹೇಳಿದ ಮೇಲೆ ₹6500 ಮೊತ್ತವನ್ನು ₹3, 000ಕ್ಕೆ ಕಡಿಮೆ ಮಾಡಿದರು. ಎರಡೂ ಮೊತ್ತಗಳ ನಡುವೆ ಎಷ್ಟು ಅಂತರ ಇದೆ ಎಂಬುದನ್ನು ನೀವು ಗಮನಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು.
ನಾನು ಆ ಹಗರಣದ ಬಗ್ಗೆ ಮಾತನಾಡಿದ್ದರಿಂದಲೇ ಬೆಂಗಳೂರಿನಲ್ಲಿ ಕಸ ಎತ್ತಲು ಮಹಾನಾಯಕ ಒಬ್ಬರು ಅಡ್ಡಿ ಮಾಡಿದರು ಎಂದು ಉಪ ಮುಖ್ಯಮಂತ್ರಿ ಆರೋಪ ಮಾಡಿದ್ದಾರೆ. ಆ ಮಹಾನಾಯಕ ಬೇರೆ ಯಾರೂ ಅಲ್ಲ, ನಾನೇ. ಅವತ್ತು ನಾನು ಆ ವಿಷಯ ಬಹಿರಂಗಪಡಿಸಿದೆ ಹೋಗಿದ್ದರೆ ಕೋಟ್ಯಂತರ ರೂಪಾಯಿ ಹಗರಣ ನಡೆಯುತ್ತಿತ್ತು. ನಾನು ಹೇಳಿದ್ದು ಜನರ ಹಣ ಕೊಳ್ಳೆ ಹೊಡೆಯಬೇಡಿ ಎಂದೇ ಹೊರತು ಕಸ ಎತ್ತಬೇಡಿ ಎಂದಲ್ಲ ಎಂದು ಅವರು ಕುಟುಕಿದರು. ಕಾಂಗ್ರೆಸ್ ಸರ್ಕಾರ ಎಲ್ಲಾ ಅಕ್ರಮ, ಅನ್ಯಾಯ ಮಾಡಿ ಎಲ್ಲೆಂದರಲ್ಲಿ ಕಸ ಸೃಷ್ಟಿ ಮಾಡಿದೆ. ಅದನ್ನು ಎತ್ತುವ, ಆ ಮೂಲಕ ಜನರನ್ನು ರಕ್ಷಣೆ ಮಾಡುವ ಟೆಂಡರ್ ತೆಗೆದುಕೊಂಡಿದ್ದೇನೆ. ಅದೇ ನಿಮ್ಮ ಇತಿಶ್ರೀ ಹಾಡಲಿದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು. ರಾಜ್ಯದಲ್ಲಿ ನಡೆಯುತ್ತಿರುವ ಈ ಸರ್ಕಾರದ ಅಕ್ರಮಗಳು, ದರೋಡೆಗಳು ಮಿತಿಮೀರಿವೆ. ವಿಧಾನಸೌಧದ ಮೂರನೇ ಮಹಡಿಯಲ್ಲಿ ಘಜ್ನಿ ಮಹಮ್ಮದ್, ಘೋರಿ ಮಹಮ್ಮದ್ ಹಾಗೂ ಮಲ್ಲಿಕ್ ಖಫೂರ ಇದ್ದಾರೆ. ಅವರನ್ನು ನಾಚುವ ರೀತಿಯಲ್ಲಿ ಕೊಳ್ಳೆ ಹೊಡೆಯುತ್ತಿದ್ದಾರೆ. ಹನಿಟ್ರ್ಯಾಪ್, ಸುಪಾರಿ ಕೊಲೆ ಬಗ್ಗೆ ಚರ್ಚೆ ಆಗುತ್ತಿದೆ. ಎಂತಹ ಪರಿಸ್ಥಿತಿಗೆ ಬಂದಿದ್ದಾರೆ ಇವರು ಎಂದು ಬೇಸರ ವ್ಯಕ್ತಪಡಿಸಿದರು.
40 ವರ್ಷಗಳ ಹಿಂದೆಯೇ ನಾನು ಬಿಡದಿಯಲ್ಲಿ ಭೂಮಿ ಖರೀದಿ ಮಾಡಿದ್ದೆ. ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಾಲ್ಕೈದು ಜೆಸಿಬಿ , 25ರಿಂದ 30 ಅಧಿಕಾರಿಗಳು, ಪೊಲೀಸರು ಬಂದು ನನ್ನ ಭೂಮಿಯನ್ನು ಅಳತೆ ಮಾಡುತ್ತಾರೆ. ತೆರವಿನ ಹೈಡ್ರಾಮಾ ಮಾಡುತ್ತಾರೆ. ಕುಮಾರಸ್ವಾಮಿ ಬೆಂಬಲಿಗರು ದಾಳಿ ಮಾಡುತ್ತಾರೆ ಎಂದು ಪೊಲೀಸರನ್ನು ಕರೆದುಕೊಂಡು ಬಂದಿದ್ದರು. ರಾಜಕೀಯ ಸೇಡು ಸಾಧಿಸುತ್ತಿದ್ದರೆ. ಎಷ್ಟು ಬೇಕೋ ಅಷ್ಟು ಸಾಧಿಸಲಿ, ಅದಕ್ಕೆ ಉತ್ತರ ಕೊಡುವ ಸಮಯ ಬರುತ್ತದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ನಾನು ಮಾಜಿ ಪ್ರಧಾನಿ ಮಗ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ನಾನು ನಾಲ್ಕು ಎಕರೆ ಜಮೀನನ್ನ ಒತ್ತುವರಿ ಮಾಡಿಕೊಳ್ಳುಬೇಕಾ? 70 ಎಕರೆ ಒತ್ತುವರಿ ಎಂದು ಯಾರೋ ಸಮಾಜ ಪರಿವರ್ತನೆ ಮಾಡುವ ವ್ಯಕ್ತಿ ಹೇಳಿದ್ದಾನೆ. ಬಂದು ತೋರಿಸಲಿ. ನಾನು ಅನುಭವದಲ್ಲಿ.ಇರುವ ಭೂಮಿಯೇ 40 ರಿಂದ 42 ಎಕರೆ. ಅತಿಕ್ರಮಣ ಮಾಡಿಕೊಂಡಿದ್ದರೆ ದಾಖಲೆ ಬಿಡುಗಡೆ ಮಾಡಲಿ. ಈ ಸರ್ಕಾರದಲ್ಲಿರುವವರು ನಾನು ಅಪರಾಧಿ ಎಂದು ಅಪಪ್ರಚಾರ ಮಾಡುವುದಕ್ಕೆ ಹೊರಟ್ಟಿದ್ದಾರೆ. ಇದಕ್ಕೆಲ್ಲ ಕುಮಾರಸ್ವಾಮಿ ಹೆದರಲ್ಲ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.